ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಸ್ ನಿಲ್ದಾಣ, ಹೊಟೇಲ್, ಮೆಡಿಕಲ್ ಸ್ಟೋರ್ ಸೇರಿದಂತೆ ಇನ್ನಿತರ ಸಾರ್ವಜನಿಕರು ಭೇಟಿ ನೀಡುವ ಸ್ಥಳಗಳಲ್ಲಿ ಕ್ಯೂ ಆರ್ ಕೋಡ್ ಅಳವಡಿಸಲಾಗುತ್ತದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಘೋಷನೆ ಮಾಡಿದ್ದಾರೆ.
ಆಹಾರ ಗುಣಮಟ್ಟ, ಸೇವೆ, ಇನ್ನೇನೇ ಸಮಸ್ಯೆಗಳು ಎದುರಾದರೂ ಕ್ಯೂ ಆರ್ ಕೋಡ್ ಸ್ಕಾನ್ ಮಾಡಿ ಸಾರ್ವಜನಿಕರು ಅಹವಾಲು ಸಲ್ಲಿಸಬಹುದಾಗಿದೆ. ಸಾರ್ವಜನಿಕರ ದೂರುಗಳನ್ನು ತ್ವರಿತವಾಗಿ ಅಧಿಕಾರಿಗಳ ಗಮನಕ್ಕೆ ತರುವ ಉದ್ದೇಶದಿಂದ ಈ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದರು. ಕರ್ನಾಟಕದಲ್ಲಿ ಮೊದಲ ಬಾರಿಗೆ ಈ ರೀತಿಯ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಕಳಪೆ ಗುಣಮಟ್ಟದ ಆಹಾರವನ್ನು ಹೊಟೇಲ್ಗಳಲ್ಲಿ ನೀಡಲಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ದಿಢೀರ್ ದಾಳಿ ನಡೆಯುತ್ತಿದೆ. ಸಾರ್ವಜನಿಕರು ಖುದ್ದಾಗಿ ತಕ್ಷಣವೇ ದೂರು ದಾಖಲಿಸುವ ವ್ಯವಸ್ಥೆ ಜಾರಿಗೆ ಬಂದರೆ ಹೊಟೇಲ್ ಸಿಬ್ಬಂದಿಯ ಮೇಲೆ ನಿಗಾ ಇಟ್ಟಂತಾಗುತ್ತದೆ ಎಂದಿದ್ದಾರೆ.
ಪಿಜಿ ಬಸ್ ನಿಲ್ದಾಣದಲ್ಲೂ ತಪಾಸಣೆ
ಬೆಂಗಳೂರಿನ ಹೋಟೆಲ್ಗಳ ಮೇಲಿನ ದಾಳಿ ಮುಂದುವರಿಯಲಿದೆ. ಇದರ ಜೊತೆಗೆ ಖಾಸಗಿ ಹಾಸ್ಟೆಲ್, ಪಿಜಿ, ಬಸ್ ನಿಲ್ದಾಣ, ಮದುವೆ ಮನೆ, ರೈಲ್ವೆ ಕ್ಯಾಂಟೀನ್ ಹಾಗೂ ವಿಮಾನಗಳಲ್ಲಿ ನೀಡುವ ಆಹಾರವನ್ನೂ ಪರಿಶೀಲಿಸಲಾಗುವುದು ಎಂದು ಖಾದರ್ ಹೇಳಿದ್ದಾರೆ. ಪಿಜಿಗಳಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದು ಪತ್ತೆಯಾದರೆ ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.



