ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರಂಭಿಸಿದ ಭಾರತ್ ಜೋಡೋ ಯಾತ್ರೆ ಕನ್ಯಾಕುಮಾರಿಯಿಂದ ಜಮ್ಮು ಮತ್ತು ಕಾಶ್ಮೀರಕ್ಕೆ ತಲುಪಿದೆ. ನಿನ್ನೆ ರಾತ್ರಿ ಜಮ್ಮು ಮತ್ತು ಕಾಶ್ಮೀರ ತಲುಪಿದ ನಂತರ ರಾಹುಲ್ ಟ್ವೀಟ್ ಮಾಡಿದ್ದಾರೆ. ಜಮ್ಮು ಮತ್ತು ಕಾಶ್ಮೀರಕ್ಕೆ ಬಂದಿದ್ದಕ್ಕೆ ತುಂಬಾ ಸಂತೋಷವಾಗಿದೆ ಮತ್ತು ಇದು ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತಿದೆ ಎಂದು ಹೇಳಿದರು. ನಮ್ಮ ಪೂರ್ವಜರ ಬೇರುಗಳು ಇಲ್ಲಿವೆ ಎಂದರು.
ದೇಶದ ಬಗ್ಗೆ, ಪ್ರತಿಯೊಂದು ರಾಜ್ಯಗಳ ಬಗ್ಗೆ ಸಾಕಷ್ಟು ಅರ್ಥಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದರು. ಸದ್ಯ ರಾಹುಲ್ ಗಾಂಧಿ ಅವರ ಪಾದಯಾತ್ರೆ ಕಥುವಾ ಪ್ರದೇಶದಲ್ಲಿ ನಡೆಯುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯಲಿರುವ ಪಾದಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಫಾರೂಕ್ ಅಬ್ದುಲ್ಲಾ, ಮೆಹಮುಬಾ ಮುಫ್ತಿ, ಒಮರ್ ಅಬ್ದುಲ್ಲಾ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.
ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಭಾರೀ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಈ ಪ್ರವಾಸವು ಇದೇ ತಿಂಗಳ 30 ರಂದು ಶ್ರೀನಗರದಲ್ಲಿ ಕೊನೆಗೊಳ್ಳಲಿದೆ. ತಮಿಳುನಾಡಿನ ಕನ್ಯಾಕುಮಾರಿಯಿಂದ ರಾಹುಲ್ ಗಾಂಧಿ ಈ ಪ್ರವಾಸ ಆರಂಭಿಸಿದ್ದು, ಇದೀಗ ಈ ಪಾದಯಾತ್ರೆ ಅಂತಿಮ ಹಂತ ತಲುಪುತ್ತಿದ್ದಂತೆ ಕಾಂಗ್ರೆಸ್ ಪಕ್ಷ ಮುಂದಿನ ಚಟುವಟಿಕೆಗಳತ್ತ ಗಮನ ಹರಿಸಿದೆ.
ಲೋಕಸಭೆ ಚುನಾವಣೆಗೂ ಮುನ್ನ ರಾಹುಲ್ ಗಾಂಧಿ ಭಾರತದ ಪೂರ್ವದಿಂದ ಪಶ್ಚಿಮ ಭಾಗದವರೆಗೆ ಭಾರತ್ ಜೋಡೋ ಯಾತ್ರೆಯಂತಹ ರ್ಯಾಲಿ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ವಿಭಾಕರ ಶಾಸ್ತ್ರಿ ಕೆಲ ದಿನಗಳ ಹಿಂದೆ ಹೇಳಿದ್ದರು. ಈ ಪ್ರಸ್ತಾಪವನ್ನು ರಾಹುಲ್ ಹೇಗೆ ಮುಂದುವರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ. ರಾಜಕೀಯ ಮೀರಿ ರಾಹುಲ್ ಪಾದಯಾತ್ರೆ ಹಮ್ಮಿಕೊಳ್ಳಲಾಗುತ್ತಿದೆ ಎನ್ನುತ್ತಾರೆ ಕಾಂಗ್ರೆಸ್ ನಾಯಕರು.