ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭೆ ಚುನಾವಣೆ ಕೊನೆಯ ಹಂತದ ಮತದಾನ ಶನಿವಾರ (ಜೂನ್ 1) ನಡೆಯಲಿದೆ. ಇದರೊಂದಿಗೆ ಸಾರ್ವತ್ರಿಕ ಚುನಾವಣೆ ಮುಗಿಯಲಿದ್ದು, ಜೂನ್ 4ರ ಫಲಿತಾಂಶದತ್ತ ಎಲ್ಲರ ಗಮನ ಇರಲಿದೆ.
ಇತ್ತ ಮೂರನೇ ಬಾರಿಗೆ ಪ್ರಧಾನಿಯಾಗುವುದು ನಿಶ್ಚಿತ ಎಂಬುದಾಗಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಅತ್ತ ಪ್ರತಿಪಕ್ಷಗಳ ಇಂಡಿಯಾ ಒಕ್ಕೂಟವೂ ಗೆಲುವಿನ ವಿಶ್ವಾಸದಲ್ಲಿದೆ.
ಇದರ ಬೆನ್ನಲ್ಲೇ, ‘ರಾಹುಲ್ ಗಾಂಧಿ ಪ್ರಧಾನಿಯಾಗಬೇಕು. ಪ್ರಿಯಾಂಕಾ ವಾದ್ರಾ ಅವರು ಚುನಾವಣೆಯಲ್ಲಿ ಸ್ಪರ್ಧಿಸಬೇಕಿತ್ತು’ ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಎನ್ಡಿಟಿವಿಯೊಂದಿಗೆ ಮಾತನಾಡುವಾಗ ಖರ್ಗೆ , ದೇಶದಲ್ಲಿ ಯಾರಾದರೂ ಪ್ರಧಾನಿಯಾಗಬೇಕು ಎಂದರೆ ನನ್ನ ಆಯ್ಕೆ ರಾಹುಲ್ ಗಾಂಧಿ. ದೇಶದ ಯುವಕ-ಯುವತಿಯರು, ದೇಶದ ಶಕ್ತಿಯನ್ನು ಅವರು ಪ್ರತಿನಿಧಿಸುತ್ತಾರೆ. ಹಾಗಾಗಿ, ರಾಹುಲ್ ಗಾಂಧಿ ಅವರೇ ಪ್ರಧಾನಿಯಾಗಬೇಕು ಎಂಬುದು ನನ್ನ ಆಸೆಯಾಗಿದೆ ಎಂದು ಅವರು ಹೇಳಿದ್ದಾರೆ.
ಇನ್ನು ಪ್ರಿಯಾಂಕಾ ವಾದ್ರಾ ಸ್ಪರ್ಧೆ ಬಗ್ಗೆ ಮಾತನಾಡಿದ ಅವರು, ‘ಪ್ರಿಯಾಂಕಾ ವಾದ್ರಾ ಅವರು ಚುನಾವಣೆಯಲ್ಲಿ ಸ್ಪರ್ಧಿಸಬೇಕಿತ್ತು. ಆದರೆ, ಚುನಾವಣೆ ಪ್ರಚಾರಕ್ಕೆ ರಾಹುಲ್ ಗಾಂಧಿ ಅವರಿಗೆ ಸಾಥ್ ನೀಡಲು ಅವರು ಸ್ಪರ್ಧಿಸಲಿಲ್ಲ’ ಎಂದು ಸ್ಪಷ್ಟಪಡಿಸಿದರು.
ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಗೆಲುವು ಸಾಧಿಸಿದರೆ ಫಲಿತಾಂಶದ ಬಳಿಕ ಎಲ್ಲ ಪಕ್ಷಗಳು ಒಗ್ಗೂಡಿ ಸರ್ಕಾರ ರಚಿಸುವ, ಪ್ರಧಾನಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಚುನಾವಣೆ ಫಲಿತಾಂಶದ ಬಳಿಕವೇ ಇದೆಲ್ಲ ನಿರ್ಧಾರವಾಗುತ್ತದೆ ಎಂದು ಸ್ಪಷ್ಟಪಡಿಸಿದರು.