ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುಗಾದಿ ಹಬ್ಬಕ್ಕೆ ಇನ್ನೂ ದಿನಗಳಿರುವಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆಯಾಗಿದೆ. ಕಳೆದ ಕೆಲವು ದಿನಗಳಿಂದ ಸತತವಾಗಿ ಕಾಡುತ್ತಿದ್ದ ಬಿಸಿಲಿನ ಧಗೆಯಿಂದ ಕಂಗಾಲಾಗಿದ್ದ ಭೂಮಿಗೆ ವರುಣ ತಂಪೆರೆದಿದ್ದಾನೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೋಮವಾರ ತಡರಾತ್ರಿಯಿಂದಲೇ ಮಳೆ ಆರಂಭವಾಗಿದ್ದು, ಕೆಂಗೇರಿ, ವಿಜಯನಗರ, ದೀಪಾಂಜಲಿನಗರ ಹಾಗೂ ಮೈಸೂರು ರಸ್ತೆ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ರಿಚ್ಮಂಡ್ ಟೌನ್ ಸುತ್ತಮುತ್ತ ತುಂತುರು ಮಳೆಯಾಗಿದ್ದು, ನಗರದ ವಾತಾವರಣ ತಂಪಾಗಿದೆ. ಮುಂದಿನ 3-4 ದಿನಗಳ ಕಾಲ ಸಂಜೆ ಅಥವಾ ರಾತ್ರಿ ವೇಳೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಳಗಾವಿ ಇಲ್ಲಿನ ಮಳೆಗೆ ರಾಮತೀರ್ಥ ನಗರದಲ್ಲಿರುವ ಮೀನುಗಾರಿಕೆ ಉಪ ನಿರ್ದೇಶಕರ ಕಚೇರಿಗೆ ನೀರು ನುಗ್ಗಿದ್ದು, ಕಚೇರಿ ಮುಂಭಾಗದಲ್ಲಿದ್ದ ಬೈಕ್ಗಳು ಭಾಗಶಃ ಮುಳುಗಡೆಯಾಗಿವೆ.
ಬಾದಾಮಿ ತಾಲೂಕಿನ ಹೊಸೂರು ಭಾಗದಲ್ಲಿ ಆಲಿಕಲ್ಲು ಮಳೆಯಾಗಿದ್ದು, ಬೆಳೆಗಳಿಗೆ ಹಾನಿಯಾಗುವ ಭೀತಿ ಎದುರಾಗಿದೆ.
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ವಾಹನ ಸವಾರರು ತುಸು ಪರದಾಡುವಂತಾಯಿತು.
ಹವಾಮಾನ ಇಲಾಖೆಯ ವರದಿಯ ಪ್ರಕಾರ, ರಾಜ್ಯದಲ್ಲಿ ಇನ್ನು ಮೂರ್ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಇರಲಿದೆ.



