ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಆರ್ಭಟ ಶುರುವಾಗಿದ್ದು, ಜನರಲ್ಲಿ ಸಂಭ್ರಮ ಮನೆ ಮಾಡಿದೆ. ಮಳೆ ನಿಂತಿದೆ ಎಂದುಕೊಂಡಿದ್ದ ಜನರು ಏಕಾಏಕಿ ಸುರಿದ ಮಳೆಗೆ ತತ್ತರಿಸಿ ಹೋಗಿದ್ದಾರೆ. ಬೆಂಗಳೂರಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿದ್ದು ವಾಹನ ಸವಾರರು ಪರದಾಡುವಂತಾಗಿದೆ.
ನಗರದ ಹಲವೆಡೆ ಸಿಡಿಲು ಸಹಿತ ಭಾರಿ ಮಳೆಯಾಗಿದ್ದು, ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಕೆ.ಆರ್.ವೃತ್ತ, ಜೆ.ಸಿ.ರಸ್ತೆ, ಮೈಸೂರು ಬ್ಯಾಂಕ್ ವೃತ್ತ, ಕೆ.ಆರ್.ಮಾರುಕಟ್ಟೆ, ವಿಜಯನಗರ, ಯಲಹಂಕ, ಮೆಜೆಸ್ಟಿಕ್, ಚಿಕ್ಕಪೇಟೆ, ರಾಜಾಜಿನಗರ, ನಾಯಂಡನಹಳ್ಳಿ, ನೆಲಮಂಗಲ, ಪುಲಕೇಶಿ ನಗರ, ಹುಳಿಮಾವು, ವಸಂತನಗರದಲ್ಲಿ ಧಾರಾಕಾರ ಮಳೆಯಾಗಿದೆ. ಮುಂದಿನ ವಾರ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದಿಂದಾಗಿ ಇಂದು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ. ಕರಾವಳಿ ಪ್ರದೇಶಗಳಿಗೂ ಮಳೆ ವ್ಯಾಪಿಸಲಿದ್ದು, ಸತತ ಏಳು ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೆಚ್ಚುವರಿಯಾಗಿ, ಮೇ 13 ಮತ್ತು 14 ರಂದು ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಸೂಚಿಸಲಾಗಿದೆ.