ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗದಲ್ಲಿ ಇಂದು ಮಳೆಯ ವಾತಾವರಣ ಮುಂದುವರಿಯಲಿದೆ.
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಆಗೂ ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಕಳದಲ್ಲಿ ಜೋರು ಮಳೆ ಬೀಳುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು ನಾಳೆ ಮೋಡಕವಿದ ವಾತಾವರಣವಿದ್ದು, ಮಳೆ ಬೀಳುವ ಸಾಧ್ಯತೆ ಇದೆ.
ಸೆಪ್ಟೆಂಬರ್ 2 ಮತ್ತು 3ರಂದು ಮಲೆನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಜೊತೆಗೆ ಉತ್ತರ ಒಳನಾಡಿನ ಗದಗ ಮತ್ತು ಬಳ್ಳಾರಿ ಜಿಲ್ಲೆಗಳ ಕೆಲವೆಡೆ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗಬಹುದು.
ಸೆಪ್ಟೆಂಬರ್ 3ರ ಬಳಿಕ ಉತ್ತರ ಕನ್ನಡ ಮತ್ತು ಶಿವಮೊಗ್ಗಕ್ಕೆ ಹೊಂದಿಕೊಂಡಿರುವ ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಮಳೆ ಚುರುಕಾಗುವ ಸಾಧ್ಯತೆಯಿದೆ. ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲವೆಡೆ ಹಾಗೂ ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.



