ಹೊಸದಿಗಂತ ವರದಿ ಮೈಸೂರು;
ನಾನಾ ಕ್ಷೇತ್ರದಲ್ಲಿ ದಶಕಗಳ ಕಾಲ ಸೇವೆ ಸಲ್ಲಿಸಿದ ಗಣ್ಯರಿಗೆ ಶುಕ್ರವಾರ ರಾತ್ರಿ ನಗರದ ಅರಮನೆ ವೇದಿಕೆಯಲ್ಲಿ ನಡೆದ ಸಮಾರಂಭದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಪೇಕ್ಷೆ ಮೇರೆಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಜಾನಪದ ತಜ್ಞ ಹಿ.ಶಿ.ರಾಮಚಂದ್ರೇಗೌಡ, ನಾಗಣ್ಣ ಮೈಸೂರು ವಿ.ವಿ ಕುಲಪತಿ ಪ್ರೊ.ಜಿ.ಹೇಮಂತ್ಕುಮಾರ್ ಮೊದಲಾದವರು ಸಮಿತಿಯಲ್ಲಿದ್ದರು.
ವಿವಿಧ ಕ್ಷೇತ್ರದಲ್ಲಿ ಸಾಧನೆ ತೋರಿದವರನ್ನು ಸಮಿತಿ ಆಯ್ಕೆ ಮಾಡಿತ್ತು.
ವರ್ಣಚಿತ್ರಕಾರರಾದ ಎಲ್.ಶಿವಲಿಂಗಪ್ಪ, ರೋಗಿಗಳ ಶುಶ್ರೂಷೆ, ಮಮತೆಯ ಮಡಿಲು ಮೂಲಕ ಸೇವೆ ಸಲ್ಲಿಸುತ್ತಿರುವ ಕೆ.ಪಿ.ಅರುಣಾಕುಮಾರಿ, ಸಮಾಜಸೇವೆಯಲ್ಲಿ ತೊಡಗಿಕೊಂಡಿರುವ ಜಿ.ಮಹಾಂತಪ್ಪ, ಜನಪದ ಗಾಯಕರಾದ ಸಿ.ಎಂ.ನರಸಿAಹಮೂರ್ತಿ, ಹಿರಿಯ ಪತ್ರಕರ್ತ ಬಿ.ಎಸ್.ಹರೀಶ್, ವಿಶೇಷ ಮಕ್ಕಳ ಸೇವೆ ಮಾಡುತ್ತಿರುವ ರತ್ನಾ ಬಿ.ಶೆಟ್ಟಿ, ಸಮಾಜಸೇವೆಯಲ್ಲಿ ತೊಡಗಿರುವ ಡಿ.ಮಾದೇಗೌಡ, ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಧರರಾಜೇ ಅರಸು ಹಾಗೂ ಮೈಸೂರಿನ `ಶಕ್ತಿಧಾಮ’ ಸಂಸ್ಥೆಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಅನಿವಾರ್ಯ ಕಾರಣಗಳಿಂದ ಸಮಾರಂಭಕ್ಕೆ ಗೈರಾದ ಸಾಹಿತಿ ಮಲೆಯೂರು ಗುರುಸ್ವಾಮಿ ಅವರ ನಿವಾಸಕ್ಕೆ ತೆರಳಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಸಮಾರಂಭದಲ್ಲಿ ಮಾತನಾಡಿದ ಸಚಿವ ಸೋಮಶೇಖರ್, ಕಳೆದ ವರ್ಷದಂತೆ ಈ ವರ್ಷ ಕೂಡ ನಾನಾ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮಹನೀಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಆಯ್ಕೆ ಸಮಿತಿ ಹತ್ತು ಸಾಧಕರನ್ನು ಆಯ್ಕೆ ಮಾಡಿದ್ದು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು ಎಂದು ಹೇಳಿದರು.
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆಗಳನ್ನು ನೆನೆಯುವುದರ ಜೊತೆಗೆ ಅವರನ್ನು ಸ್ಪೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದರು.
ಸಮಾರಂಭದಲ್ಲಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಜಿಪಂ ಸಿಇಒ ಪೂರ್ಣಿಮಾ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಮಿರ್ಲೇ ಶ್ರೀನಿವಾಸ್ ಸೇರಿದಂತೆ ನಾನಾ ನಿಗಮ ಮಂಡಳಿಗಳ ಅಧ್ಯಕ್ಷರು, ಮೂಡಾ ಮಾಜಿ ಅಧ್ಯಕ್ಷರಾದ ರಾಜೀವ್, ಜಂಗಲ್ಸ್ ಲಾಡ್ಜ್ಸ್ ಅಂಡ್ ರೆಸಾರ್ಟ್ ಮಾಜಿ ಅಧ್ಯಕ್ಷರಾದ ಅಪ್ಪಣ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.