ಹೊಸದಿಗಂತ ಡಿಜಿಟಲ್ ಡೆಸ್ಕ್:
ನಿರ್ಭಯಾ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ಪ್ರಕಟಿಸಿದ ಬಳಿಕ ದೇಶದಲ್ಲಿ ಅತ್ಯಾಚಾರ, ಕೊಲೆ ಪ್ರಕರಣಗಳು ಹೆಚ್ಚಳವಾಗಿವೆ ಎಂಬ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿಕೆ ಬೆನ್ನಲ್ಲೇ ಅತ್ಯಾಚಾರ-ಹತ್ಯೆಯಂತಹ ಹೀನಾಯ ಕೃತ್ಯಗಳನ್ನು ಕಾಂಗ್ರೆಸ್ ನಿರ್ಲಕ್ಷಿಸುತ್ತಿದೆ ಮತ್ತು ಅಪರಾಧಿಗಳನ್ನು ಸಮರ್ಥಿಸುತ್ತಿದೆ ಎಂದು ಬಿಜೆಪಿ ಆಪಾದಿಸಿದೆ.
ಮುಖ್ಯಮಂತ್ರಿ ಗೆಹ್ಲೋಟ್ ಅವರ ಅಸಂಬದ್ಧ ಹೇಳಿಕೆ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಧ್ರಾ ಮೌನ ವಹಿಸಲು ಕಾರಣವೇನೆಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಝಾದ್ ಪೂನಾವಾಲಾ ಪ್ರಶ್ನಿಸಿದ್ದಾರೆ. ಅತ್ಯಧಿಕ ಮಹಿಳಾ ದೌರ್ಜನ್ಯ ನಡೆಯುವ ರಾಜ್ಯಗಳ ಪೈಕಿ ರಾಜಸ್ಥಾನ ತೀರಾ ಮುಂಚೂಣಿಯಲ್ಲಿದೆ ಎಂದು ಟೀಕಿಸಿದ್ದಾರೆ.