ಹೊಸದಿಗಂತ ಡಿಜಿಟಲ್ ಡೆಸ್ಕ್:
ಪೌರಾಯುಕ್ತೆಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ರಾಜೀವ್ ಗೌಡರನ್ನು ಬಂಧಿಸುವ ವಿಚಾರದಲ್ಲಿ ಯಾವುದೇ ಸಡಿಲತೆ ಇಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಖಡಕ್ ಸಂದೇಶ ನೀಡಿದ್ದಾರೆ.
ಮೊದಲ ದಿನವೇ ಬಂಧನಕ್ಕೆ ಸೂಚನೆ ನೀಡಲಾಗಿತ್ತು, ಆದರೆ ಅವರು ತಪ್ಪಿಸಿಕೊಂಡಿದ್ದಾರೆ. ಎಷ್ಟು ದಿನಗಳಾದರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಖಂಡಿತವಾಗಿ ಬಂಧಿಸುತ್ತೇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವರು, ರಾಜೀವ್ ಗೌಡರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸರ್ಕಾರ ಸಂಪೂರ್ಣ ಬದ್ಧವಾಗಿದೆ. ಯಾವುದೇ ಒತ್ತಡಕ್ಕೂ ಮಣಿಯದೇ, ಕಾನೂನಿನ ಪ್ರಕಾರ ತಕ್ಷಣವೇ ಅವರನ್ನು ಬಂಧಿಸಲಾಗುವುದು ಎಂದು ಭರವಸೆ ನೀಡಿದರು.
ಇದೇ ವೇಳೆ ಬೆಳಗಾವಿಯಲ್ಲಿ ನಡೆದ 400 ಕೋಟಿ ರೂಪಾಯಿ ಮೌಲ್ಯದ ದೊಡ್ಡ ದರೋಡೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಮಹಾರಾಷ್ಟ್ರ ಪೊಲೀಸರು ಕರ್ನಾಟಕ ಪೊಲೀಸರಿಗೆ ಸಹಕಾರ ಕೇಳಿ ಪತ್ರ ಬರೆದಿದ್ದಾರೆ ಎಂದು ತಿಳಿಸಿದರು. ತನಿಖೆ ಇನ್ನೂ ಆರಂಭಿಕ ಹಂತದಲ್ಲಿದ್ದು, ಹೆಚ್ಚಿನ ಮಾಹಿತಿ ಬಂದ ಬಳಿಕ ರಾಜ್ಯ ಪೊಲೀಸ್ ಇಲಾಖೆ ಮುಂದಿನ ಕ್ರಮ ನಿರ್ಧರಿಸಲಿದೆ ಎಂದರು.



