September 8, 2026
Tuesday, September 8, 2026
spot_img

ರಾಮಮಂದಿರ ಟ್ರಸ್ಟ್ ಅಕ್ರಮ ಆರೋಪ: ಸಿಬಿಐ ತನಿಖೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇಣಿಗೆ ಹಣದಲ್ಲಿ ಭಾರಿ ದುರ್ಬಳಕೆ ಹಾಗೂ ಆರ್ಥಿಕ ಅಕ್ರಮಗಳು ನಡೆದಿವೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಕುರಿತು ಕೇಂದ್ರೀಯ ತನಿಖಾ ದಳ (CBI) ಮೂಲಕ ತನಿಖೆ ನಡೆಸುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿದ್ದು, ನ್ಯಾಯಾಲಯವು ಇದರ ವಿಚಾರಣೆಗೆ ಸಮ್ಮತಿಸಿದೆ.

ಜೂನ್ 29ಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ವಕೀಲರಾದ ಅಜಯ್ ಕುಮಾರ್ ರೈ ಮತ್ತು ದಿನೇಶ್ ಕುಮಾರ್ ಯಾದವ್ ಅವರು ಸಲ್ಲಿಸಿದ ಈ ಅರ್ಜಿಯನ್ನು ಸುಪ್ರೀಂಕೋರ್ಟ್‌ನ ಗೌರವಾನ್ವಿತ ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ದ್ವಿಸದಸ್ಯ ಪೀಠವು ಆಲಿಸಿತು. ಆರಂಭಿಕ ಪ್ರಕ್ರಿಯೆಗಳ ಬಳಿಕ, ನ್ಯಾಯಾಲಯವು ಈ ಅರ್ಜಿಯ ಮುಂದಿನ ವಿಚಾರಣೆಯನ್ನು ಜೂನ್ 29 ಕ್ಕೆ ನಿಗದಿಪಡಿಸಿದೆ.

ಸಿಬಿಐ (CBI) ವಿಶೇಷ ತಂಡದಿಂದ ತನಿಖೆಗೆ ಆಗ್ರಹ

“ರಾಮಮಂದಿರಕ್ಕೆ ಸಾರ್ವಜನಿಕರು ನೀಡಿದ ದೇಣಿಗೆ ಹಣ ದುರುಪಯೋಗವಾಗಿರುವ ಬಗ್ಗೆ ತಕ್ಷಣವೇ ಎಫ್‌ಐಆರ್ (FIR) ದಾಖಲಾಗಬೇಕು. ದೇಶದ ಕೋಟ್ಯಂತರ ಭಕ್ತರ ಭಾವನೆಗಳಿಗೆ ಸಂಬಂಧಿಸಿದ ವಿಷಯ ಇದಾಗಿರುವುದರಿಂದ, ಸಿಬಿಐನ ವಿಶೇಷ ತನಿಖಾ ತಂಡ (SIT) ಈ ಹಗರಣದ ಸಮಗ್ರ ತನಿಖೆ ನಡೆಸಬೇಕು” ಎಂದು ಅರ್ಜಿದಾರರು ಕೋರಿದ್ದಾರೆ.

ಇದು ನೇರವಾಗಿ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ಗೆ ಸಂಬಂಧಿಸಿದ ಪ್ರಮುಖ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಾಗಿದ್ದು, ಇಡೀ ದೇಶದ ಗಮನ ಸೆಳೆದಿದೆ. ಸದ್ಯ ಅರ್ಜಿಯನ್ನು ನ್ಯಾಯಾಲಯದಲ್ಲಿ ಪಟ್ಟಿ ಮಾಡಲಾಗಿದ್ದು, ಜೂನ್ 29 ರಂದು ನಡೆಯಲಿರುವ ಸುಪ್ರೀಂಕೋರ್ಟ್‌ನ ಮುಂದಿನ ನಡೆ ತೀವ್ರ ಕುತೂಹಲ ಕೆರಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !