ಹೊಸದಿಗಂತ ಡಿಜಿಟಲ್ ಡೆಸ್ಕ್:
ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿದ್ದರೂ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡದೇ ಬಂಡಾಯವೆದ್ದಿರುವ 24 ಅಭ್ಯರ್ಥಿಗಳಿಗೆ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕು ಎಂದು ಶತಃಪ್ರಯತ್ನ ಮಾಡುತ್ತಿದೆ. ಆದರೆ, ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಮಾಜಿ ಶಾಸಕರು, ಸಚಿವರು, ಕಾಂಗ್ರೆಸ್ ಘಟಕದಲ್ಲಿ ಪ್ರಮುಖ ಸ್ಥಾನಮಾನ ಹೊಂದಿದ್ದವರು, ಕಾಂಗ್ರೆಸ್ ಮುಖಂಡರು ಹಾಗೂ ಟಿಕೆಟ್ ಆಕಾಂಕ್ಷಿಗಳು ಈಗಾಗಲೇ ಟಿಕೆಟ್ ಸಿಗದೇ ಬಂಡಾಯ ಸ್ಪರ್ಧೆ ಮಾಡಿದ್ದಾರೆ. ಆದರೆ, ಬಂಡಾಯ ಸ್ಪರ್ಧೆ ಮಾಡಿ ಕಾಂಗ್ರೆಸ್ ಬಾವುಟ ಬಳಕೆ ಮಾಡುತ್ತಿದ್ದರೂ ಪಕ್ಷದ ಶಿಸ್ತುಪಾಲನಾ ಸಮಿತಿಯಿಂದ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಆದರೆ, ಮತದಾನಕ್ಕೆ ಇನ್ನು 8 ದಿನಗಳು ಬಾಕಿ ಇದೆ ಎನ್ನುವಾಗ ಬಂಡಾಯವೆದ್ದ 24 ಅಭ್ಯರ್ಥಿಗಳನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಛಾಟನೆ ಮಾಡಲಾಗಿದೆ.
ಬಂಡಾಯದ ಬಾವುಟ ಹಾರಿಸಿದ್ದ 24 ಅಭ್ಯರ್ಥಿಗಳಿಗೆ ಗೇಟ್ ಪಾಸ್ ನೀಡಲಾಗಿದೆ. ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದು ಹಾಕಿ ಬಂಡಾಯ ಅಭ್ಯರ್ಥಿಗಳಿಗೆ ಶಾಕ್ ನೀಡಲಾಗಿದೆ. ಇನ್ನು ಈಗ ಪಕ್ಷದಿಂದ ಉಚ್ಛಾಟನೆಗೊಂಡ ಸದಸ್ಯರು ಮುಂದಿನ 6 ವರ್ಷಗಳ ಕಾಲ ಮತ್ತೆ ಪಕ್ಷವನ್ನು ಸೇರುವಂತಿಲ್ಲ. ಇನ್ನು ಈಗ ಪಕ್ಷದಿಂದ ಉಚ್ಛಾಟನೆಗೊಂಡ ಎಲ್ಲ ಸದಸ್ಯರು ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಬಂಡಾಯವೆದ್ದು ಸ್ಪರ್ಧೆ ಮಾಡಿದ್ದ ಬಂಡಾಯ ಅಭ್ಯರ್ಥಿಗಳು ಆಗಿದ್ದಾರೆ. ಈ ಕುರಿತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಕೆ.ರೆಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ.
ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಕುಣಿಗಲ್ ನ ಮಾಜಿ ಶಾಸಕ ಬಿ.ಬಿ. ರಾಮಸ್ವಾಮಿಗೌಡ, ಜಗಳೂರುನ ಮಾಜಿ ಶಾಸಕ ಹೆಚ್.ಪಿ. ರಾಜೇಶ್ , ಹರಪನಹಳ್ಳಿಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಪಿ. ಲತಾ ಮಲ್ಲಿಕಾರ್ಜುನ, ಅರಕಲಗೂಡಿನ ಕಾಂಗ್ರೆಸ್ ನಾಯಕ ಕೃಷ್ನೇಗೌಡ , ಬೀದರ್ ದಕ್ಷಿಣ ಕೆಪಿಸಿಸಿ- ಸಂಯೋಜಕ ಚಂದ್ರಾ ಸಿಂಗ್ ಮೊದಲಾವರನ್ನು ಉಚ್ಛಾಟನೆ ಮಾಡಲಾಗಿದೆ.