ಹೊಸದಿಗಂತ ವರದಿ,ಕಾಸರಗೋಡು:
ಕಳೆದ 24 ಗಂಟೆಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕಾಸರಗೋಡು ಜಿಲ್ಲೆಯ ಬಹುತೇಕ ಪ್ರದೇಶಗಳು ಜಲಾವೃತಗೊಂಡಿವೆ.
ಅಲ್ಲದೆ ಮುಂಗಾರು ಮಳೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಪ್ರಬಲ ಮಳೆಯಾಗುವ ಸಾಧ್ಯತೆಯಿರುವುದರಿಂದ ಕೇಂದ್ರ ಹವಾಮಾನ ಇಲಾಖೆಯು ಜುಲೈ 19 ರಂದು ಕಾಸರಗೋಡು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಆದ್ದರಿಂದ ಮುಂಜಾಗ್ರತೆಯ ಭಾಗವಾಗಿ ಜಿಲ್ಲೆಯಲ್ಲಿರುವ ರಾಜ್ಯ ಪಠ್ಯಕ್ರಮದ ಶಾಲೆಗಳು, ಸಿಬಿಎಸ್ಇ, ಐಸಿಎಸ್ಇ, ಕೇಂದ್ರೀಯ ವಿದ್ಯಾಲಯ, ಅಂಗನವಾಡಿ, ಮದರಸಾ ಮತ್ತು ಇತರ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಕೆ.ಇನ್ಬಶೇಖರ್ ಅವರು ಜುಲೈ 19ರಂದು ರಜೆ ಘೋಷಿಸಿದ್ದಾರೆ. ಕಾಲೇಜುಗಳಿಗೆ ರಜೆ ಅನ್ವಯಿಸುವುದಿಲ್ಲ. ಪೂರ್ವ ನಿರ್ಧರಿತ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲದೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.