January19, 2026
Monday, January 19, 2026
spot_img

ತಿರುಮಲದಲ್ಲಿ ಕರ್ನಾಟಕದ ಅತಿಥಿ ಗೃಹಗಳಿಗೆ ಕಾಯಕಲ್ಪ: ರಾಮಲಿಂಗಾರೆಡ್ಡಿ ಖುದ್ದು ಭೇಟಿ, ಪರಿಶೀಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಳಗಾವಿ ಅಧಿವೇಶನದಲ್ಲಿ ನೀಡಿದ ಭರವಸೆಯಂತೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ತಿರುಮಲಕ್ಕೆ ಭೇಟಿ ನೀಡಿ, ಅಲ್ಲಿ ನಡೆಯುತ್ತಿರುವ ಕರ್ನಾಟಕ ಸರ್ಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದರು.

ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ವಿಧಾನಸಭಾ ಅಧಿವೇಶನದ ವೇಳೆ ಶಾಸಕ ಎಸ್.ಆರ್. ವಿಶ್ವನಾಥ್ ಮತ್ತು ವಿಧಾನ ಪರಿಷತ್ ಸದಸ್ಯ ಶರವಣ ಅವರು ತಿರುಮಲದಲ್ಲಿ ಕರ್ನಾಟಕ ಸರ್ಕಾರದ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳಲ್ಲಿ ನ್ಯೂನತೆಗಳಿವೆ ಎಂದು ಸರ್ಕಾರದ ಗಮನ ಸೆಳೆದಿದ್ದರು. ಈ ದೂರಿಗೆ ಅಂದೇ ಪ್ರತಿಕ್ರಿಯಿಸಿದ್ದ ಸಚಿವರು, ನಾನೇ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ವಾಸ್ತವಾಂಶ ಪರಿಶೀಲಿಸುವುದಾಗಿ ಭರವಸೆ ನೀಡಿದ್ದರು.

ನುಡಿದಂತೆ ತಿರುಮಲಕ್ಕೆ ತೆರಳಿದ ಸಚಿವರು, ಟಿಟಿಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಮೂರು ಅತಿಥಿ ಗೃಹಗಳು ಹಾಗೂ ಛತ್ರದ ಸ್ಥಿತಿಗತಿಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಕಾಮಗಾರಿಯ ಗುಣಮಟ್ಟ ಮತ್ತು ವೇಗವನ್ನು ಗಮನಿಸಿದ ಸಚಿವರು, ಯಾವುದೇ ಅಡೆತಡೆಗಳಿಲ್ಲದೆ ಬಾಕಿ ಉಳಿದಿರುವ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾರ್ಚ್ 2026ರೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಭೇಟಿಯಿಂದಾಗಿ ತಿರುಪತಿಗೆ ಭೇಟಿ ನೀಡುವ ಕರ್ನಾಟಕದ ಭಕ್ತಾದಿಗಳಿಗೆ ಶೀಘ್ರದಲ್ಲೇ ಉತ್ತಮ ಮೂಲಭೂತ ಸೌಕರ್ಯಗಳು ದೊರೆಯುವ ನಿರೀಕ್ಷೆಯಿದೆ.

Must Read