ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜೀವ್ ಗಾಂಧಿ ಹತ್ಯೆಯ ಕುರಿತು ತಮಿಳು ನಾಡಿನ ರಾಜ್ಯಪಾಲರು ನಿಷ್ಕ್ರಿಯತೆ ತೋರಿದ್ದಾರೆ ಎಂದು ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ವಾಗ್ದಾಳಿ ನಡೆಸಿದ್ದಾರೆ. ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆಗೊಳಿಸುವಂತೆ ರಾಜ್ಯಸರ್ಕಾರವು 2018ರಲ್ಲಿಯೇ ಶಿಫಾರಸ್ಸು ಮಾಡಿತ್ತು. ಆದರೆ ರಾಜ್ಯಪಾಲರು ಈ ವಿಷಯದ ಕುರಿತು ನಿಷ್ಕ್ರಿಯತೆ ತೋರಿದ್ದಾರೆ. ಅವರು ಅಂದೇ ಇದರ ಕುರಿತು ಕಾರ್ಯಪ್ರವೃತ್ತರಾಗಿದ್ದರೆ ಇಂದು ಕೋರ್ಟ್ ಮಧ್ಯಪ್ರವೇಶಿಸಬೇಕಾದ ಅಗತ್ಯತೆ ಬರುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.
2018ರಲ್ಲಿ ಸಚಿವ ಸಂಪುಟ ಅಂಗೀಕರಿಸಿದ್ದ ಶಿಫಾರಸನ್ನು ರಾಜ್ಯಪಾಲರು ಅಂಗೀಕರಿಸಿದ್ದರೆ ಆರು ಮಂದಿಯ ಬಿಡುಗಡೆಗೆ ನಾಲ್ಕು ವರ್ಷಗಳ ವಿಳಂಬವಾಗುವುದನ್ನು ತಪ್ಪಿಸಬಹುದಿತ್ತು ಎಂದು ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.
ನೇಮಕಗೊಂಡ ಸ್ಥಾನದಲ್ಲಿರುವವರು ರಾಜ್ಯ ಸರ್ಕಾರದ ನಿರ್ಧಾರಗಳ ಮೇಲೆ ಅಡೆತಡೆಗಳನ್ನು ಸೃಷ್ಟಿಸುವುದನ್ನು ನಿಲ್ಲಿಸಬೇಕು. ರಾಜ್ಯ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಗಳಲ್ಲಿ ಮಧ್ಯಪ್ರವೇಶಿಸುವ ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ನ ತೀರ್ಪು ಒಂದು ಪಾಠವಾಗಿದೆ ಎಂದು ಅವರು ಹೇಳಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಶ್ರೀಹರನ್ ಸೇರಿದಂತೆ ಎಲ್ಲಾ ಆರು ಅಪರಾಧಿಗಳ ಬಿಡುಗಡೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದ್ದು, ಅಪರಾಧಕ್ಕೆ ಸಂಬಂಧಿಸಿದಂತೆ ಅವರೆಲ್ಲರೂ ಶಿಕ್ಷೆಯನ್ನು ಅನುಭವಿಸಿದ್ದಾರೆ ಎಂದು ಪರಿಗಣಿಸಿದ ನಂತರ ಆರು ಅಪರಾಧಿಗಳನ್ನು ಅವಧಿಗೆ ಮುನ್ನ ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.