ಹೊಸದಿಗಂತ ಡಿಜಿಟಲ್ ಡೆಸ್ಕ್ :
ಇಂದು ಬಾಳೆಹೊನ್ನೂರಿನ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರಿಗೆ ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಬಾಳೆಹೊನ್ನೂರಿನ ರಂಭಾಪುರಿ ಮಠದ ಆವರಣದಲ್ಲಿ ಏರ್ಪಡಿಸಿದ್ದ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ, ವೀರಭದ್ರಸ್ವಾಮಿ ರಥೋತ್ಸವ, ರೇಣುಕಾಚಾರ್ಯ ಪ್ರಶಸ್ತಿ ಪ್ರದಾನ ಸಮಾರಂಭ, ಶಿವಾದ್ವೈತ ಧರ್ಮ ಸಮ್ಮೇಳನದಲ್ಲಿ ಯಡಿಯೂರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪುರಸ್ಕಾರವು ಒಂದು ಲಕ್ಷ ರೂಪಾಯಿ ನಗದು, ಸ್ಮರಣಿಕೆ, ಫಲಕಗಳನ್ನು ಒಳಗೊಂಡಿದೆ.
ಕಾರ್ಯಕ್ರಮದಲ್ಲಿ ಪ್ರಸನ್ನ ರೇಣುಕ ವೀರಸೋಮೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬೆಂಗಳೂರಿನ ಮುಕ್ತಿಮಂದಿರದ ಅಧ್ಯಕ್ಷ ವಿಮಲ ರೇಣುಕ ವೀರಮುಕ್ತಿ ಸ್ವಾಮೀಜಿ, ಹಂಪಸಾಗರದ ನವಲಿ ಹಿರೇಮಠದ ಶಿವಲಿಂಗ ರುದ್ರಮುನಿ ಸ್ವಾಮೀಜಿ, ಬಾಳೆಹೊನ್ನೂರಿನ ಜುಕ್ತಿ ಹಿರೇಮಠದ ಕೊಟ್ಟೂರು ಬಸವೇಶ್ವರ ಸ್ವಾಮೀಜಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್, ಶಾಸಕ ಸಿ.ಟಿ.ರವಿ, ಡಿ.ಎಸ್.ಸುರೇಶ್, ಎಂ.ಪಿ.ಕುಮಾರಸ್ವಾಮಿ, ಜಿಲ್ಲಾಧಿಕಾರಿ ಕೆ.ಎನ್.ರಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ.ವೆಂಕಟೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಾನಕಿ ಪಾಲ್ಗೊಂಡಿದ್ದರು.