ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಹೈ ಕೋರ್ಟ್ ನಿಂದ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಕೊಲೆ ಪ್ರಕರಣದ ಎ14 ಆರೋಪಿ ಪ್ರದೋಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಮಾಡಲು ಸೆಷನ್ಸ್ ಕೋರ್ಟ್ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಪ್ರದೋಷ್ಗೆ ಮಾಫಿ ಸಾಕ್ಷಿಯಾಗಲು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಪ್ರಕರಣದ ಎ2 ಆರೋಪಿ ದರ್ಶನ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಪ್ರದೋಷ್ ಮಾಫಿ ಸಾಕ್ಷಿಯಾಗಿ ಹೇಳಿಕೆ ನೀಡುವುದಕ್ಕೆ ಹೈಕೋರ್ಟ್ ಯಾವುದೇ ತಡೆ ನೀಡಿಲ್ಲ. ಬದಲಾಗಿ, ವಿಚಾರಣಾ ನ್ಯಾಯಾಲಯವು ಈ ವಿಚಾರದಲ್ಲಿ ಮತ್ತೊಮ್ಮೆ ಆದೇಶ ಹೊರಡಿಸುವಂತೆ ಸೂಚಿಸಿದೆ.
ಈ ಆದೇಶದಿಂದ ದರ್ಶನ್ಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಿದ್ದರೂ, ಪ್ರಕರಣದ ತನಿಖೆ ಮತ್ತು ವಿಚಾರಣೆಯ ಮೇಲೆ ಇದರ ಅಂತಿಮ ಪರಿಣಾಮ ಏನು ಎಂಬುದು ವಿಚಾರಣಾ ನ್ಯಾಯಾಲಯದ ಮುಂದಿನ ಆದೇಶದ ಬಳಿಕ ಸ್ಪಷ್ಟವಾಗಲಿದೆ. ಒಂದು ವಾರದೊಳಗೆ ಮರು ಆದೇಶ ನೀಡುವಂತೆ ಹೈಕೋರ್ಟ್ ಸೂಚಿಸಿರುವುದರಿಂದ, ಇದೀಗ ಎಲ್ಲರ ಗಮನ ಸೆಷನ್ಸ್ ಕೋರ್ಟ್ನ ಮುಂದಿನ ಕ್ರಮದತ್ತ ನೆಟ್ಟಿದೆ.



