ಜುಲೈ 17ರ ಒಳಗೆ ಕೆಐಎಡಿಬಿಯಲ್ಲಿನ ಲೋಪಗಳ ಕುರಿತು ವರದಿ ನೀಡಿ: ಸಚಿವ ಎಂಬಿ ಪಾಟೀಲ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕ ಕೈಗಾರಿಕೆ ಪ್ರದೇಶ ಅಭಿವೃದ್ಧಿ ಮಂಡಳಿ (KIADB) ವತಿಯಿಂದ ಹಂಚಿಕೆಯಾಗಿರುವ ನಿವೇಶನಗಳಿಗೆ ಸಂಬಂಧಿಸಿ ಅಂಕಿಸಂಖ್ಯೆ, ಅವುಗಳ ಸ್ಥಿತಿಗತಿ, ಸ್ವಾಧೀನ ಪ್ರಕ್ರಿಯೆಯಲ್ಲಿ ಆಗಿರುವ ಲೋಪಗಳ ಕುರಿತು ಜುಲೈ 17ರ ವೇಳೆಗೆ ಸಮಗ್ರ ವರದಿ ಸಲ್ಲಿಸುವಂತೆ ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂಬಿ ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೆಐಎಡಿಬಿ ನಿವೇಶನ ಹಂಚಿಕೆ ಸಂಬಂಧ ಕಳೆದ 4-5 ವರ್ಷಗಳಲ್ಲಿ 1,748 ಮೊಕದ್ದಮೆಗಳು ದಾಖಲಾಗಿವೆ. ಈ ಪೈಕಿ 921 ಪ್ರಕರಣಗಳ ವಿಚಾರಣೆ ನಡೆಯುತ್ತಿವೆ.

ಈ ಸಂಬಂಧ ಕೈಗಾರಿಕೆ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಮಂಗಳವಾರ ಸುದೀರ್ಘ ಸಭೆ ನಡೆಸಿದ ಎಂಬಿ ಪಾಟೀಲ್ , ಒಟ್ಟು ಪ್ರಕರಣಗಳ ಪೈಕಿ 762 ಕೇಸ್‌ಗಳಲ್ಲಿ ಸರ್ಕಾರ ಪರ ಆದೇಶ ಬಂದಿದೆ.ಸರ್ಕಾರ ಹಿತಾಸಕ್ತಿ ಇರುವ ಕೆಲವು ಪ್ರಕರಣಗಳಲ್ಲಿ ನಾವು ಮೇಲ್ಮನವಿಯನ್ನೇ ಸಲ್ಲಿಸಿಲ್ಲ. ಇನ್ನು ಮುಂದೆ ಇಂತಹ ಪ್ರಕರಣಗಳಲ್ಲಿ ಎಲ್ಲವನ್ನೂ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಕಾನೂನು ಇಲಾಖೆಯ ಗಮನಕ್ಕೆ ತಂದು, ಸಲಹೆ ಪಡೆಯಬೇಕು. ಜೊತೆಗೆ ಅಡ್ವೊಕೇಟ್‌ ಜನರಲ್ ಅವರ ಅಭಿಪ್ರಾಯವನ್ನೂ ಕೇಳಬೇಕು ಎಂದು ಹೇಳಿದರು.

ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 10 ವರ್ಷಗಳ ಹಿಂದೆಯೇ 92 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಂಡಿದ್ದರೂ ಅಂತಿಮ ಅಧಿಸೂಚನೆಯನ್ನೇ ಹೊರಡಿಸಿಲ್ಲ. ಇದರಲ್ಲಿ ಕೆಲವರು ಅಧಿಸೂಚನೆಯ ಪರವಾಗಿದ್ದರೆ, ಕೆಲವರು ವಿರೋಧಿಸುತ್ತಿದ್ದಾರೆ. ಇದನ್ನು ಸಮಗ್ರವಾಗಿ ಪರಿಶೀಲಿಸಿ, ಸೂಕ್ತ ರೀತಿಯಲ್ಲಿ ಬಗೆಹರಿಸಬೇಕು. ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಸರಿಯಾದ ವಿಧಿವಿಧಾನ ಅನುಸರಿಸದೆ ಇರುವುದೇ ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲೇರಲು ಕಾರಣವಾಗಿವೆ ಎಂದು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರ ಬಳಿ ಈಗ ಕೈಗಾರಿಕೆಗಳ ಬಳಕೆಗೆಂದು 11,000 ಎಕರೆ ಭೂಮಿ ಇದೆ. ಇದರ ಮೌಲ್ಯ 8 ರಿಂದ 10 ಸಾವಿರ ಕೋಟಿ ರೂಪಾಯಿ ಆಗುತ್ತದೆ. ರಾಜ್ಯದಲ್ಲಿ ಎಲ್ಲೆಂದರಲ್ಲಿ ಕೈಗಾರಿಕಾ ಪ್ರದೇಶಗಳನ್ನು ಮಾಡುವ ಬದಲು ಬೇಡಿಕೆ ಆಧರಿಸಿ ಮಾಡಬೇಕು. ಇದಷ್ಟೇ ಅಲ್ಲದೇ ಒಂದು ನಿರ್ದಿಷ್ಟ ಮಾದರಿಯ ಉದ್ಯಮಗಳಿಗೆ ಮೀಸಲಿಟ್ಟಿರುವ ಜಾಗಗಳಲ್ಲಿ ಅಂತಹ ಉದ್ದಿಮೆಗಳು ನಿರೀಕ್ಷಿತ ಪ್ರಮಾಣದಲ್ಲಿ ಬಾರದಿದ್ದರೆ, ಅಲ್ಲಿರುವ ಜಾಗವನ್ನು ಉಳಿದ ಉದ್ದಿಮೆಗಳಿಗೂ ಒದಗಿಸುವ ನೀತಿಯನ್ನು ಅಳವಡಿಸಿ ಕೊಳ್ಳಲಾಗುವುದು ಎಂದು ಸಚಿವರು ವಿವರಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!