ಹೊಸದಿಗಂತ ವರದಿ ಸೋಮವಾರಪೇಟೆ
ವೀರಶೈವ ಲಿಂಗಾಯತರನ್ನೆಲ್ಲಾ ಹಿಂದುಳಿದ 2ಅ ವರ್ಗಕ್ಕೆ ಸೇರಿಸಲು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಆಗ್ರಹಿಸಿದ್ದು, ಈ ಸಂಬಂಧ ಹಿಂದುಳಿದ ವರ್ಗಗಳ ಆಯೋಗಕ್ಕೆ ಮನವಿ ಸಲ್ಲಿಸಿದೆ.
ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂಗವನ್ನು ಹಿಂದುಳಿದ ವರ್ಗ 2ಎ ವರ್ಗಕ್ಕೆ ಸೇರಿಸಬೇಕೆಂಬ ಬೇಡಿಕೆಯ ಹಿನ್ನೆಲೆಯಲ್ಲಿ, ಸರ್ಕಾರದ ಆದೇಶದಂತೆ ಮಾಹಿತಿ ಸಂಗ್ರಹಿಸಿ ವರದಿ ಸಲ್ಲಿಸಲು ರಾಜ್ಯ ಪ್ರವಾಸ ಕೈಗೊಂಡಿರುವ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ನೇತೃತ್ವದ ತಂಡಕ್ಕೆ ಈ ಸಂಬಂಧ ವೇದಿಕೆ ಮನವಿ ಮಾಡಿದೆ.
ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ನೇತೃತ್ವದ ತಂಡ ಆಯೋಗವನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಕೊಡಗು ಜಿಲ್ಲೆಯಲ್ಲಿ ವೀರಶೈವ ಲಿಂಗಾಯತ ಒಂದೇ ಎಂಬ ಭಾವನೆಯಿಂದ, ಸಹಬಾಳ್ವೆಯ ಜೀವನ ನಡೆಸುತ್ತಿದ್ದೇವೆ. ಆದರೆ ಮೀಸಲಾತಿಯ ನೆಪದಲ್ಲಿ ಸಮುದಾಯವನ್ನು ಒಡೆಯುವುದು ಬೇಡ. ಮೀಸಲಾತಿ ಕಲ್ಪಿಸುವುದಾದರೆ ವೀರಶೈವ ಲಿಂಗಾಯತ ಸಮುದಾಯದವರಿಗೆಲ್ಲಾ ಅನುಕೂಲವಾಗುವಂತೆ ಆ ಅವಕಾಶ ಮಾಡಿ ಕೊಡಿ ಎಂದು ಆಯೋಗಕ್ಕೆ ಮನವರಿಕೆ ಮಾಡಿದರು.
ಮನವಿ ಸ್ವೀಕರಿಸಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಅಭಿಪ್ರಾಯ ಸಂಗ್ರಹಿಸುತ್ತಿದ್ದೇವೆ.ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದರು.
ಈ ಸಂದರ್ಭ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಜಿಲ್ಲಾದ್ಯಕ್ಷ ಎ.ಎಸ್.ಮಲ್ಲೇಶ್, ಕಾರ್ಯದರ್ಶಿ ಗಿರೀಶ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಉಷಾರಾಣಿ, ಗೌರವಾಧ್ಯಕ್ಷ ಭುವನೇಶ್ವರಿ, ಉಪಾಧ್ಯಕ್ಷೆ ಭಾಗವತಿ ದೇಶಮುಖ್, ಕಾರ್ಯದರ್ಶಿ ಗೀತಾ ರಾಜು, ಸರಿತಾ, ತಾಲೂಕು ಘಟಕದ ಅಧ್ಯಕ್ಷ ಜಿ.ಬಿ.ಜಯರಾಜ್, ವೀರಶೈವ ಮಹಾಸಭಾದ ಯುವ ಘಟಕದ ತಾಲೂಕು ಅಧ್ಯಕ್ಷ ಆದರ್ಶ್ ಪದಾಧಿಕಾರಿಗಳಾದ ಪ್ರೇಂನಾಥ್, ಲಿಖಿತ್, ಜೀವನ್ ಮುಂತಾದವರು ಹಾಜರಿದ್ದರು
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ