ಹೊಸದಿಗಂತ ವರದಿ,ಕಲಬುರಗಿ:
ಜಿಲ್ಲೆಯ ಆಳಂದ ತಾಲೂಕಿನಲಿ ಉದ್ಯೋಗ ಖಾತ್ರಿ ಸೇರಿದಂತೆ ತಡೆ ಹಿಡಿದಿರುವ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಆರಂಭಿಸುವಂತೆ ಒತ್ತಾಯಿಸಿ ಆಳಂದ ತಾಲೂಕು ಗ್ರಾಮ ಪಂಚಾಯತ ಚುನಾಯಿತ ಪ್ರತಿನಿಧಿಗಳ ಒಕ್ಕೂಟ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಲಿಶ ಸಸಿ ಮಂಗಳವಾರ ಮನವಿ ಪತ್ರ ಸಲ್ಲಿಸಿತು.
ಆಳಂದ ತಾಲೂಕಿನಲ್ಲಿ ನಮ್ಮ ಹೊಲ ನಮ್ಮ ರಸ್ತೆ, ಉದ್ಯೋಗ ಖಾತರಿಯಲ್ಲಿನ ಕೃಷಿ ಹೊಂಡ, ಬಾಂದಾರು ಹಾಕುವುದು ಸೇರಿದಂತೆ ವಿವಿಧ ಕಾಮಗಾರಿಗಳಿಗೆ ತಡೆ ನೀಡಲಾಗಿದೆ. ಇದರಿಂದ ಅಭಿವೃದ್ಧಿ ಮಾಡಲು ನಮ್ಮ ಗ್ರಾಮಗಳಲ್ಲಿ ತೊಂದರೆಯಾಗುತ್ತಿದೆ. ಕೂಡಲೇ ಉದ್ಯೋಗ ಖಾತರಿ ಸೇರಿದಂತೆ ತಡೆ ನೀಡಿರುವ ಕಾಮಗಾರಿಗಳನ್ನು ಕೂಡಲೇ ಆರಂಭಿಸಿ ಅಭಿವೃದ್ಧಿಗೆ ವೇಗ ಕೊಡಬೇಕು ಮತ್ತು ದುಡಿಯುವ ಕೈಗಳಿಗೆ ಕೆಲಸ ಕೊಡಬೇಕು ಎಂದು ಮನವಿ ಮಾಡಿಕೊಂಡರು.
ಆಳಂದ ಮಾಜಿ ಶಾಸಕ ಬಿ ಆರ್ ಪಾಟೀಲ ಅಭಿವೃದ್ಧಿಯನ್ನು ಸಹಿಸದೇ ರಾಜಕೀಯ ಲಾಭದ ದೃಷ್ಟಿಯಿಂದ ಎಲ್ಲಾ ಕಾಮಗಾರಿಗಳ ಮೇಲೆ ಸುಳ್ಳು ದೂರು ನೀಡಿ ಕಾಮಗಾರಿಗಳನ್ನು ತಡೆ ಹಿಡಿಯುವಂತೆ ಮಾಡಿ ಸರ್ಕಾರಿ ಅಧಿಕಾರಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಕೇವಲ ರಾಜಕೀಯ ಲಾಭಕೊಸ್ಕರ ಚುನಾಯಿತ ಜನಪ್ರತಿನಿಧಿಗಳು ಭ್ರಷ್ಟಾಚಾರ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಪಂಚಾಯತ ಸದಸ್ಯರಿಂದ ಹಿಡಿದು ಶಾಸಕರವರೆಗೆ ಅವರ ಹೆಸರು ಕೆಡಿಸಲು ಅವರ ವಿರುದ್ಧ ದುರುದ್ದೇಶಪೂರ್ವಕವಾಗಿ ದೂರುಗಳನ್ನು ನೀಡಿ ಅಭಿವೃದ್ಧಿ ಸ್ಥಗಿತಗೊಳಿಸಿ ಅಭಿವೃದ್ಧಿ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಎಂದು ಹೇಳಿದರು.