ಹೊಸದಿಗಂತ ವರದಿ, ಮಡಿಕೇರಿ
ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಭಾಗಮಂಡಲದಿಂದ ಕೊಡಗಿನ ಗಡಿ ಭಾಗವಾದ ಕರಿಕೆಗೆ ಸಮಯಕ್ಕೆ ಸರಿಯಾಗಿ ಉಚಿತ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಕರಿಕೆ ಗ್ರಾ.ಪಂ ಉಪಾಧ್ಯಕ್ಷ ಎನ್.ಬಾಲಚಂದ್ರ ನಾಯರ್ ಹಾಗೂ ಸರಕಾರಿ ಸಂಯುಕ್ತ ಪ್ರೌಢಶಾಲೆ ಅಧ್ಯಕ್ಷ ಟಿ.ಆರ್.ಶ್ರೀನಿವಾಸ್ ಮನವಿ ಮಾಡಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಅವರು, ಕರಿಕೆ ಗ್ರಾಮದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ವಿವರಿಸಿದರು.
ಮಾ.28 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದ ಸಮಯಕ್ಕೆ ಸರಿಯಾಗಿ ಶಾಲೆಗಳಿಗೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದರು.
ಕರಿಕೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 32 ವಿದ್ಯಾರ್ಥಿಗಳು ಭಾಗಮಂಡಲದ ಕಾವೇರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಕರಿಕೆಯಿಂದ ಬೆಳಗ್ಗೆ 7.15 ಗಂಟೆಗೆ ಬಸ್ ವ್ಯವಸ್ಥೆ ಇದೆ. ಆದರೆ ಪರೀಕ್ಷೆ ಮುಗಿಯುವ ಮಧ್ಯಾಹ್ನದ ಸಮಯ 1.45ರ ನಂತರ ಭಾಗಮಂಡದಿಂದ ಕರಿಕೆಗೆ ಯಾವುದೇ ಬಸ್ ಸೌಲಭ್ಯವಿರುವುದಿಲ್ಲ. ಆದ್ದರಿಂದ ಪರೀಕ್ಷಾ ಅವಧಿಯ ನಂತರ ಭಾಗಮಂಡಲದಿಂದ ಕರಿಕೆಗೆ ಉಚಿತ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಅವರು ಮನವಿ ಮಾಡಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ