ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿರುವ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳ ಆಡಳಿತಾತ್ಮಕ ಹುದ್ದೆಗಳಲ್ಲಿ ಕನ್ನಡಿಗರಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಲ್ಲಿ ಶೇ.75 ಮೀಸಲಾತಿ ನಿಗದಿಪಡಿಸುವ ಕರಡು ಮಸೂದೆಗೆ ರಾಜ್ಯ ಸರ್ಕಾರ ತಾತ್ಕಾಲಿಕ ತಡೆ ನೀಡಿದೆ.
ಸಂಪುಟ ಅನುಮೋದನೆ ನೀಡಲಾಗಿದ್ದ ಮಸೂದೆ ಕುರಿತು ಮುಂದಿನ ದಿನಗಳಲ್ಲಿ ಮತ್ತೊಂದು ಬಾರಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ಕನ್ನಡಿಗರಿಗೆ ಉದ್ಯೋಗ ಮೀಸಲಾತಿಯ ಕರಡು ಮಸೂದೆ ಜಾರಿಗೆ ತರುವುದಾಗಿ ಘೋಷಿಸಿದ ತಕ್ಷಣವೇ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತಗೊಂಡಿತ್ತು. ಪ್ರಮುಖ ಉದ್ಯಮಿಗಳು ಈ ಬಗ್ಗೆ ಆಕ್ಷೇಪ ಎತ್ತಿದ್ದರು. ನೆರೆ ರಾಜ್ಯದ ಸರ್ಕಾರಗಳೂ ಇದರ ಬಗ್ಗೆ ತಕರಾರು ಎತ್ತಿದ್ದವು. ಈ ಒತ್ತಡಕ್ಕೆ ಬಗ್ಗಿರುವ ಸರ್ಕಾರ ಮಸೂದಗೆ ತಾತ್ಕಾಲಿಕ ತಡೆಯನ್ನು ನೀಡಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ‘ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ.ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.