ಹೊಸದಿಗಂತ ವರದಿ ವಿಜಯಪುರ:
ಲಿಂಗಾಯತ ಪಂಚಮಸಾಲಿ ಮೀಸಲಾತಿ ಹೋರಾಟ ಮತ್ತೆ ಆರಂಭವಾಗಲಿದೆ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಮಾಜಕ್ಕೆ 2ಡಿ ಮೀಸಲಾತಿ ಅಥವಾ 2ಎ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.
ಅಲ್ಲದೇ ಸರ್ಕಾರ ರಚನೆಯಾಗಿ ಮೂರು ತಿಂಗಳು ಕಳೆದಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಸಭೆ ಕರೆಯುತ್ತೇವೆ ಎಂದಿದ್ದರು. ಆದರೆ ಮೂರು ತಿಂಗಳು ಕಳೆದರೂ ಇದುವರೆಗೂ ಸಭೆ ಕರೆದಿಲ್ಲ. ಹೀಗಾಗಿ ಸರ್ಕಾರದ ಗಮನ ಸೆಳೆಯಲು ಎಲ್ಲ ಜಿಲ್ಲೆಗಳಲ್ಲಿ ಇಷ್ಟಲಿಂಗ ಪೂಜೆ ಮಾಡುತ್ತಿದ್ದೇವೆ. ಆದಷ್ಟು ಬೇಗ ಮುಖ್ಯಮಂತ್ರಿಗಳು ಸಭೆ ಕರೆಯಬೇಕು ಎಂದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಮಾಜಕ್ಕಾಗಿ ಸಚಿವ ಸ್ಥಾನ ಕಳೆದುಕೊಂಡರು. ಬಿಜೆಪಿ ಸರ್ಕಾರ ವಿರುದ್ಧ ಹೋರಾಟ ಮಾಡಿ ಸಮಾಜಕ್ಕೆ ಮೀಸಲಾತಿ ಸಿಗಲು ಕಾರಣರಾದವರು. ಅವರು ನಮ್ಮೊಟ್ಟಿಗೆ ಇದ್ದಾರೆ ಎಂದರು.
ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ನಮ್ಮ ಸಮಾಜದ 11 ಶಾಸಕರು ಈಗ ಹೋರಾಟ ಮಾಡಲಿ ಅನ್ನುವುದು ಯತ್ನಾಳರ ಅಭಿಪ್ರಾಯ ಅಷ್ಟೆ ಎಂದರು.
ಕಾಂಗ್ರೆಸ್ನಲ್ಲಿ ಲಿಂಗಾಯತ ಸಮಾಜದ 11 ಜನ ಶಾಸಕರು ಇದ್ದಾರೆ. ಡಿಸಿಎಂ ಸ್ಥಾನ ನೀಡುವುದಾದರೆ ನಮ್ಮವರಿಗೂ ಮಾನ್ಯತೆ ನೀಡಲು ಮನವಿ ಮಾಡುತ್ತೇನೆ ಎಂದರು.