ಹೊಸದಿಗಂತ ವರದಿ ಸೋಮವಾರಪೇಟೆ:
ಸರ್ಕಾರಿ ಇಲಾಖೆಗಳು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಸಾಧ್ಯವಾದಷ್ಟು ಬೇಗ ಕಡತ ವಿಲೇವಾರಿಗೊಳಿಸಬೇಕು ಎಂದು ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ಗೋಕುಲ್ ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.
ತಾಲೂಕು ಕಾನೂನು ಸೇವಾ ಸಮಿತಿ ಹಾಗೂ ತಾಲೂಕು ಆಡಳಿತದ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ದಿನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
ಈ ರಾಷ್ಟ್ರದಲ್ಲಿ ಜನಸಾಮಾನ್ಯರು ಉತ್ತಮವಾಗಿ ಜೀವಿಸಲು ಅನುಕೂಲವಾಗುವಂತೆ ಸಂವಿಧಾನ ರಚಿಸಿದ್ದಾರೆ. ಅದಕ್ಕೆ ಚ್ಯುತಿ ಬಾರದಂತೆ ಕರ್ತವ್ಯ ನಿರ್ವಹಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.
ಇಂದು ಜನಸಾಮಾನ್ಯರು ಕಂದಾಯ ಹಾಗೂ ಸರ್ವೆ ಇಲಾಖೆಗೆ ದಿನನಿತ್ಯ ಅಲೆಯುತ್ತಿದ್ದಾರೆ ಈ ಬಗ್ಗೆ ನಮ್ಮ ಗಮನಕ್ಕೂ ಬಂದಿದೆ ಸರ್ವೇ, ಪೋಡಿ, ದುರಸ್ತಿಗೆ ಸಂಬಂಧಿಸಿದಂತೆ ಸಮಸ್ಯೆಗಳಾಗಿವೆ. ಇದಕ್ಕೆ ಸಂಬಂಧಿಸಿದಂತೆ ಕೆಲವು ಪ್ರಕರಣಗಳು ನ್ಯಾಯಾಲಯದಲ್ಲಿವೆ. ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಬೇಕಾಗಿದೆ ಎಂದ ಅವರು ಕಂದಾಯ ಹಾಗೂ ಸರ್ವೇ ಇಲಾಖೆ ನೌಕರರಿಗೆ ಕೆಲವು ಮಾಹಿತಿ ನೀಡಿದರು.
ವಿದ್ಯಾರ್ಥಿಗಳ ಮೇಲೆ ಕಣ್ಣಿಡಿ: ಕೆಲವು ವಿದ್ಯಾರ್ಥಿಗಳು ಹಾಗೂ ಯುವಕರು ಗಾಂಜಾ ವ್ಯಸನಿಗಳಾಗಿ ಹಾದಿ ತಪ್ಪುತಿದ್ದಾರೆ. ಅವರ ಮೆಲೆ ಪೊಲೀಸ್ ಇಲಾಖೆ ಕಣ್ಣಿರಿಸಬೇಕೆಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಗೋಪಾಲಕೃಷ್ಣ ತಿಳಿಸಿದರು.
ಪಟ್ಟಣದಲ್ಲಿ ಚಿಕ್ಕ ವಯಸ್ಸಿನ ವಿದ್ಯಾರ್ಥಿಗಳು ಗಾಂಜಾ ದಾಸರಾಗಿ ಅಲೆಯುತ್ತಿದ್ದಾರೆ. ಮಕ್ಕಳು ಹಾಗೂ ದಾಖಲೆ ಇಲ್ಲದೆ ವಾಹನ ಚಾಲನೆ ಮಾಡುತ್ತಿದ್ದಾರೆ. ಅಪಘಾತವಾದರೆ ಆಸ್ತ-ಪಾಸ್ತಿ ಮಾರಿ ಪರಿಹಾರ ನೀಡುವಂತಾಗುತ್ತದೆ ಎಂದು ಎಚ್ಚರಿಸಿದ ಅವರು, ಈ ಬಗ್ಗೆ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ತಮ್ಮ ಮಕ್ಕಳ ಬಗ್ಗೆ ಪೋಷಕರು ಗಮನ ಹರಿಸಬೇಕು ಎಂದರು. ತಹಶೀಲ್ದಾರ್ ಎಸ್.ಎನ್.ನರಗುಂದ, ಪೊಲೀಸ್ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್ ಉಪಸ್ಥಿತರಿದ್ದರು.