ಹೊಸದಿಗಂತ ಡಿಜಿಟಲ್ ಡೆಸ್ಕ್ :
ಭಾರೀ ಚರ್ಚೆ, ಕುತೂಹಲಕ್ಕೆ ಕಾರಣವಾಗಿರುವ ನಿವೃತ್ತ ಡಿಜಿ, ಐಜಿಪಿ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಒಂದೊಂದೇ ಮಾಹಿತಿಗಳು ಹೊರಬೀಳುತ್ತಿವೆ.
ಓಂ ಪ್ರಕಾಶ್ ಅವರನ್ನು ಇರಿದು ಕೊಲೆ ಮಾಡಿರುವುದು ಸ್ಪಷ್ಟವಾಗಿದ್ದು, ಇದಕ್ಕೆ ಪೂರಕವಾಗಿ ದೇಹದ ಮೂರು ಭಾಗಗಳಲ್ಲಿ ಇರಿತದ ಗಾಯಗಳನ್ನು ಪತ್ತೆಹಚ್ಚಲಾಗಿದೆ. ಇದಲ್ಲದೆ ಘಟನೆ ನಡೆದಿರುವ ಬೆಂಗಳೂರು ನಗರದ ಹೆಚ್ಎಸ್ಆರ್ ಲೇಔಟ್ನ ಅವರ ನಿವಾಸದಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು, ಚಾಕುವನ್ನು ಕೂಡಾ ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನಷ್ಟು ಸಾಕ್ಷ್ಯಗಳನ್ನು ಕಲೆಹಾಕುತ್ತಿರುವ ಪೊಲೀಸರು ಈ ಸಂಬಂಧ ಹಲವರನ್ನು ವಿಚಾರಣೆಗೊಳಪಡಿಸಿದ್ದಾರೆ.
ಸದ್ಯ ಓಂಪ್ರಕಾಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೆಂಟ್ ಜಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷಾ ವರದಿ ಬಂದ ಬಳಿಕ ಇನ್ನಷ್ಟು ಮಾಹಿತಿಗಳು ಹೊರಬೀಳುವ ನಿರೀಕ್ಷೆಯಿದೆ.