ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ಆರೋಪದ ಮೇಲೆ ಸಕಲೇಶಪುರದ ನಿವೃತ್ತ ಯೋಧ ವಸಂತ್ ಕುಮಾರ್ (40) ಅವರನ್ನು ಸಿಸಿಬಿ ಸೈಬರ್ ಪೊಲೀಸರು ಬಂಧಿಸಿದ್ದಾರೆ.
ಬಂಧಿತನಾದ ವಸಂತ್ ಕುಮಾರ್ ನಿವೃತ್ತಿ ಬಳಿಕ ಸ್ವಗ್ರಾಮದಲ್ಲೇ ಕೃಷಿ ಮಾಡುತ್ತ ಜೀವನ ಸಾಗಿಸುತ್ತಿದ್ದರು ಎಂದು ತಿಳಿದುಬಂದಿದೆ.
ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕನ್ನಡ ಬರುತ್ತದೆಯೇ ಎಂದು ಸಿಎಂ ಸಿದ್ದರಾಮಯ್ಯ ಕೇಳಿದ್ದನ್ನು ಆಧರಿಸಿ, “ಹನುಮ ಭಕ್ತ” ಎಂಬ ಹೆಸರಿನ ಫೇಸ್ಬುಕ್ ಪೇಜ್ನಲ್ಲಿ ಸಿಎಂ ಕುರಿತು ಏಕವಚನದಲ್ಲಿ ನಿಂದನಾತ್ಮಕ ಪೋಸ್ಟ್ ಹಾಕಲಾಗಿತ್ತು. ಈ ಪೋಸ್ಟ್ ವಸಂತ್ ಕುಮಾರ್ ಅವರದ್ದೆಂದು ಪತ್ತೆಯಾದ ನಂತರ, ಸಿಸಿಬಿ ಸೈಬರ್ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಸಾರ್ವಜನಿಕ ವ್ಯಕ್ತಿಗಳ ವಿರುದ್ಧ ಅವಹೇಳನಾತ್ಮಕ ಬರಹಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಪೊಲೀಸರು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿದ್ದು, ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.