ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ತರಲು ಕೇಂದ್ರ ಸರಕಾರ ಮುಂದಾಗಿದ್ದು, ಇಂದು ರಾಜ್ಯಸಭೆಯಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಬೆಂಬಲ ಸೂಚಿಸಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಕಳೆದ ಹತ್ತು ವರ್ಷಗಳಲ್ಲಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ರೈಲ್ವೇ ವಲಯದಲ್ಲಿ ಕ್ರಾಂತಿಕಾರಕ ಅಭಿವೃದ್ಧಿ ಮಾಡಲಾಗಿದೆ ಎಂದು ಶ್ಲಾಘಿಸಿದರು.
ಕರ್ನಾಟಕದಲ್ಲಿ ಮೈಸೂರು ಮಹಾರಾಜರ ಆಳ್ವಿಕೆ ವೇಳೆ ಮೈಸೂರು – ಹರಿಹರದವರೆಗೂ ಮೀಟರ್ ಗೇಜ್ ರೇಲು ಮಾರ್ಗ ನಿರ್ಮಿಸಿದ್ದನ್ನು ಸ್ಮರಿಸಿದರು. ಆಗಿನ ತಮ್ಮ ರೈಲು ಪ್ರಯಾಣದ ಅನುಭವವನ್ನು ನೆನಪಿಸಿಕೊಂಡರು.
ಈಗ ಬಾಂಬೆ – ಚೆನ್ನೈ ರೈಲು ಮಾರ್ಗವೂ ಹರಿಹರ – ದಾವಣಗೆರೆ – ಶೃಂಗೇರಿ – ಬೇಲೂರು ಮೂಲಕ ಚನ್ನೈಗೆ ಹಾದು ಹೋಗುತ್ತಿದ್ದು ಜನರಿಗೆ ಸಾಕಷ್ಟು ಅನುಕೂಲವಾಗುತ್ತಿದೆ. ಕಳೆದ 10 ವರ್ಷಗಳಲ್ಲಿ ದೇಶಾದ್ಯಂತ ನಿರೀಕ್ಷೆಗೂ ಮೀರಿ ರೈಲ್ವೆ ಜಾಲ ಮತ್ತು ಮಾರ್ಗಗಳು ಸಾಕಷ್ಟು ಪ್ರಗತಿ ಸಾಧಿಸಿದೆ. ಈ ವಿಚಾರವಾಗಿ ಮೋದಿ ಹಾಗೂ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಅಭಿನಂದಿಸುವುದಾಗಿ ಅವರು ಹೇಳಿದ್ದಾರೆ.
ನಾನು ರೇಲ್ವೆ ಸಚಿವರನ್ನು ಅಭಿನಂದಿಸಿದರೆ ಕೆಲವರು ತಪ್ಪು ತಿಳಿದುಕೊಳ್ಳಬಾರದು. ನಾನು ಪ್ರಧಾನಿ ಆಗಿದ್ದಾಗ ಈ ಕ್ಷೇತ್ರದಲ್ಲಿ ಏನು ಮಾಡಿದ್ದೇನೆ, ನರೇಂದ್ರ ಮೋದಿ ಅವರು ಹತ್ತು ವರ್ಷಗಳಲ್ಲಿ ಏನೆಲ್ಲಾ ಬದಲಾವಣೆ ಮಾಡಿದ್ದಾರೆ ಎನ್ನುವುದು ನನಗೆ ತಿಳಿದಿದೆ ಎಂದು ಹೇಳಿದರು.