May 15, 2026
Friday, May 15, 2026
spot_img

ಆರ್‌ಜಿ ಕರ್ ಪ್ರಕರಣ: ಮೂವರು IPS ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ ಸಿಎಂ ಸುವೇಂದು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ಬಹುಚರ್ಚಿತ ಆರ್‌ಜಿ ಕರ್ ಕಾಲೇಜು ಕೊಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಕ್ರಮ ಕೈಗೊಳ್ಳಲಾಗಿದೆ.

ತನಿಖೆಯಲ್ಲಿ ನಿರ್ಲಕ್ಷ್ಯ ಹಾಗೂ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಸಿಎಂ ಸುವೇಂದು ಅಧಿಕಾರಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ, ಪ್ರಕರಣದ ತನಿಖೆ ವೇಳೆ ಸಂತ್ರಸ್ತೆಯ ಕುಟುಂಬದ ಮೇಲೆ ಪ್ರಭಾವ ಬೀರುವ ಯತ್ನ ನಡೆದಿತ್ತು ಎಂದು ಆರೋಪಿಸಿದರು. ಕುಟುಂಬಕ್ಕೆ ಲಂಚದ ಆಮಿಷ ಒಡ್ಡಲು ಪ್ರಯತ್ನಿಸಲಾಗಿದೆ ಎನ್ನುವ ಗಂಭೀರ ಆರೋಪವೂ ಕೇಳಿಬಂದಿದೆ. ಜೊತೆಗೆ ಸರ್ಕಾರದ ಲಿಖಿತ ಅನುಮತಿ ಪಡೆಯದೇ ಪತ್ರಿಕಾಗೋಷ್ಠಿ ನಡೆಸಿರುವ ಆರೋಪವೂ ಅಧಿಕಾರಿಗಳ ಮೇಲೆ ಇದೆ.

ಇದನ್ನೂ ಓದಿ:

ಈ ಹಿನ್ನೆಲೆ ಆಗಿನ ಕೋಲ್ಕತ್ತಾ ಪೊಲೀಸ್ ಆಯುಕ್ತ ವಿನೀತ್ ಗೋಯೆಲ್, ಅಭಿಷೇಕ್ ಗುಪ್ತಾ ಹಾಗೂ ಇಂದಿರಾ ಮುಖ್ಯೋಪಾಧ್ಯಾಯ ಅವರನ್ನು ಅಮಾನತುಗೊಳಿಸಿ ಇಲಾಖಾ ತನಿಖೆ ಆರಂಭಿಸಲಾಗಿದೆ. ಪ್ರಕರಣದ ಸಂಪೂರ್ಣ ತನಿಖೆ ಪಾರದರ್ಶಕವಾಗಿ ನಡೆಯಬೇಕು ಎಂಬ ಒತ್ತಾಯವೂ ಹೆಚ್ಚಾಗಿದೆ.

ಆರ್‌ಜಿ ಕರ್ ಪ್ರಕರಣ ಪಶ್ಚಿಮ ಬಂಗಾಳ ರಾಜಕೀಯದಲ್ಲೂ ಭಾರೀ ಸಂಚಲನ ಮೂಡಿಸಿತ್ತು. ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಈ ವಿಷಯವನ್ನು ಪ್ರಮುಖ ಅಸ್ತ್ರವನ್ನಾಗಿ ಬಳಸಿತ್ತು. ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ಒದಗಿಸುವ ಭರವಸೆ ನೀಡಿದ್ದ ಬಿಜೆಪಿ, ಈ ಪ್ರಕರಣವನ್ನು ಜನರ ಮುಂದೆ ಬಲವಾಗಿ ಪ್ರಸ್ತಾಪಿಸಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !