ಹೊಸ ದಿಗಂತ ಡಿಜಿಟಲ್ ಡೆಸ್ಕ್:
‘ಕಾಂತಾರ: ಚಾಪ್ಟರ್ 1’ ಸಿನಿಮಾದ ಸಕ್ಸಸ್ ನಡುವೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಬುಧವಾರ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಇನ್ನು, ರಿಷ ಶೆಟ್ಟಿ ಅವರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಮೆಚ್ಚುಗೆ ಸೂಚಿಸಿ, ಟ್ವೀಟ್ ಮಾಡಿದ್ದಾರೆ.
ರಿಷಬ್ ಶೆಟ್ಟಿ ಅವರನ್ನು ಭೇಟಿ ಮಾಡಿದ ಬಳಿಕ ಫೋಟೋಗಳನ್ನು ಹಂಚಿಕೊಂಡಿರುವ ಡಿಸಿಎಂ ಡಿಕೆ ಶಿವಕುಮಾರ್, ‘ನಟ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇಂದು (ನ.19) ನನ್ನ ಗೃಹಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ವೇಳೆ ‘ಕಾಂತಾರ: ಒಂದು ದಂತಕಥೆ – ಅಧ್ಯಾಯ 1′ ಚಿತ್ರ ಯಶಸ್ವಿಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದೆ’ ಎಂದು ಹೇಳಿದ್ದಾರೆ.
ನಮ್ಮ ನೆಲಮೂಲದ ಆಚಾರ-ವಿಚಾರ, ಸಂಪ್ರದಾಯ, ಸಂಸೃತಿಯನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿರುವ ರಿಷಬ್ ಶೆಟ್ಟಿ ಅವರ ಕಾರ್ಯವೈಖರಿ ಶ್ಲಾಘನೀಯ. ಮುಂದಿನ ಅವರ ಚಿತ್ರರಂಗದ ಪಯಣಕ್ಕೆ ಒಳ್ಳೆಯದಾಗಲಿ, ಇನ್ನೂ ಎತ್ತರಕ್ಕೆ ಅವರು ಬೆಳೆಯಲಿ ಎಂದು ಶುಭಹಾರೈಸಿದೆ’ ಎಂದು ಹೇಳಿದ್ದಾರೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್.
ರಿಷಬ್ ಶೆಟ್ಟಿ ಅವರು ಸದ್ಯ ಕಾಂತಾರ: ಚಾಪ್ಟರ್ 1 ಸಿನಿಮಾದ ಸಕ್ಸಸ್ ಅಲೆಯಲ್ಲಿ ತೇಲುತ್ತಿದ್ದಾರೆ. ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾವು ಸುಮಾರು 850 ಕೋಟಿ ರೂ. ಗಳಿಗೂ ಅಧಿಕ ಹಣವನ್ನು ಬಾಚಿಕೊಂಡಿದೆ. ʻಕೆಜಿಎಫ್ 2ʼ ನಂತರ ಅತೀ ಹೆಚ್ಚು ಗಳಿಕೆ ಮಾಡಿದ ಕನ್ನಡ ಸಿನಿಮಾ ಎಂಬ ಖ್ಯಾತಿಯನ್ನು ಕಾಂತಾರ ಚಾಪ್ಟರ್ 1 ಪಡೆದುಕೊಂಡಿದೆ. ಅಲ್ಲದೆ, 2025ರಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಭಾರತೀಯ ಸಿನಿಮಾ ಎಂಬ ಖ್ಯಾತಿಯು ಈ ಚಿತ್ರಕ್ಕೆ ದಕ್ಕಿದೆ.

