ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ವೈನಾಡು ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ, ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯವು ಸಂಪೂರ್ಣವಾಗಿ ಭರ್ತಿಯಾಗಿದೆ. ಕಾವೇರಿ ಕೊಳ್ಳದ ಹಾರಂಗಿ, ಹೇಮಾವತಿ ಹಾಗೂ ಕೆಆರ್ಎಸ್ ಅಣೆಕಟ್ಟುಗಳಿಗೂ ನೀರು ಹರಿದುಬರುತ್ತಿದ್ದು, ಪ್ರಸ್ತುತ ಕಬಿನಿ ಡ್ಯಾಂಗೆ 30,000 ಕ್ಯೂಸೆಕ್ ಒಳಹರಿವು ದಾಖಲಾಗಿದೆ.
ಸುರಕ್ಷತೆಗಾಗಿ 25,000 ಕ್ಯೂಸೆಕ್ ನೀರು ನದಿಗೆ
ಅಣೆಕಟ್ಟೆಯ ಸುರಕ್ಷತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ನಾಲ್ಕು ಕ್ರೇಸ್ಟ್ ಗೇಟ್ಗಳನ್ನು ತೆರೆದು, ಕಪಿಲಾ ನದಿಗೆ 25,000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಆಗಸ್ಟ್ 1 ರಂದು ತಮಿಳುನಾಡಿಗೆ ಕೇವಲ 5,000 ಕ್ಯೂಸೆಕ್ ನೀರು ಹರಿಸಲಾಗಿತ್ತು. ಆದರೆ, ಈಗ ಒಳಹರಿವು ದಿಢೀರ್ ಹೆಚ್ಚಾದ ಕಾರಣ ಹೊರಹರಿವಿನ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ.
ನದಿ ತೀರದ ಜನರಿಗೆ ಮುನ್ನೆಚ್ಚರಿಕೆ
ನೀರಿನ ಹರಿವು ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿರುವುದರಿಂದ ಕಪಿಲಾ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದೆ. ನದಿ ತೀರದ ನಿವಾಸಿಗಳು, ಸಾರ್ವಜನಿಕರು ಹಾಗೂ ರೈತರು ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸ್ಥಳೀಯ ಆಡಳಿತ ಜಾಗೃತಿ ಮೂಡಿಸಿದೆ.



