ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಉರ್ದು ಶಾಲೆಗಳ ಅಭಿವೃದ್ಧಿಗೆ 400 ರೂ. ಕೋಟಿ ಅನುದಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ಇದಾಗಿದ್ದು, ಹಿಂದುಳಿದ ವರ್ಗಗಳ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದಿದ್ದಾರೆ.
ಅಲ್ಪಸಂಖ್ಯಾತ ಕಲ್ಯಾಣಕ್ಕಾಗಿ ಹೊಸ ವಿದ್ಯಾರ್ಥಿನಿಲಯಗಳು, ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ 10 ಹೊಸ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳ ಉನ್ನತೀಕರಣಕ್ಕೆ ಒತ್ತು ನೀಡಲಾಗಿದೆ.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೆ-ಸಿಇಟಿ, ಜೆಇಇ, ನೀಟ್ ಪರೀಕ್ಷೆಗಳಿಗೆ ತರಬೇತಿ ನೀಡಲು ನಾಲ್ಕು ವಸತಿ ಶಾಲೆಗಳನ್ನು ಸೆಂಟರ್ ಆಫ್ ಎಕ್ಸಲೆನ್ಸ್ಗಳನ್ನಾಗಿ ಸ್ಥಾಪಿಸಲಾಗುವುದು. ಜೈನ್, ಬೌದ್ಧ, ಸಿಖ್ ಸಮುದಾಯಗಳ ಅಭಿವೃದ್ಧಿಗೆ 100 ಕೋಟಿ ರೂಪಾಯಿ ಮತ್ತು ಬೌದ್ಧ ಧರ್ಮಾಚಾರಿಗಳಿಗೆ ಮಾಸಿಕ 6,000 ರೂಪಾಯಿ ಗೌರವಧನ ನೀಡಲಾಗುವುದು ಎಂದಿದ್ದಾರೆ.
ನಿರುದ್ಯೋಗಿ ಯುವಕರಿಗೆ ಫಾಸ್ಟ್ ಫುಡ್ ಟ್ರಕ್, ಮೊಬೈಲ್ ಕಿಚನ್ ಸೌಲಭ್ಯಗಳಿಗೆ ಸಹಾಯಧನ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳಿಗೆ ಉತ್ತೇಜನ ನೀಡಲಾಗುವುದು. 5,000 ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಖರೀದಿಗೆ ತಲಾ 50,000 ರೂಪಾಯಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.



