ಹೊಸದಿಗಂತ ವರದಿ ಬೆಳಗಾವಿ :
ಜಗತ್ತಿನ ಯಾವುದೇ ಮೂಲೆಯಲ್ಲಿ ಹಿಂದುಗಳಿಗೆ ಅನ್ಯಾಯವಾದಾಗ ಅವರ ಪರವಾಗಿ ಧ್ವನಿ ಎತ್ತುವ ಸಂಘಟನೆ ಆರ್ಎಸ್ಎಸ್ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಭಾನುವಾರ ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಪ್ರಿಯಾಂಕ್ ಖರ್ಗೆ ಅವರು ಹಿಂದೂ ಸಮಾಜವನ್ನು ದುರ್ಬಲಗೊಳಿಸುವ ಹಾಗೂ ವಿಭಜಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.
ಹಿಂದೂಗಳ ರಕ್ಷಣೆಗೆ ನಿಂತಿರುವ ಆರ್ಎಸ್ಎಸ್ ಸಂಘಟನೆಯನ್ನು ಗುರಿಯಾಗಿಸಿಕೊಂಡು ಸಚಿವರು ನೀಡುತ್ತಿರುವ ಹೇಳಿಕೆಗಳ ಹಿಂದೆ ಹಿಂದು ವಿರೋಧಿ ಸಂಘಟನೆಗಳ ಪ್ರಭಾವವಿದೆ ಎಂದು ಅವರು ಟೀಕಿಸಿದರು.
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನು ರಕ್ಷಿಸುವ ಕೆಲಸ ರಾಜ್ಯದಲ್ಲಿ ನಡೆಯುತ್ತಿದ್ದು, ಮತ್ತೊಂದೆಡೆ ‘ಭಾರತ ಮಾತಾ ಕೀ ಜೈ’ ಎಂದು ಘೋಷಿಸುವ ದೇಶಭಕ್ತರನ್ನು ದುರ್ಬಲಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ಕಿಡಿಕಾರಿದರು.
ಹಿಂದುತ್ವವನ್ನು ವಿರೋಧಿಸುವ ಶಕ್ತಿಗಳು ಒಂದಾಗಿ ಆರ್ಎಸ್ಎಸ್ ವಿರುದ್ಧ ಮಾತನಾಡುತ್ತಿವೆ. ಆದರೆ ಸಚಿವರ ಇಂತಹ ರಾಜಕೀಯ ತಂತ್ರಗಳಿಗೆ ಹಿಂದೂ ಸಮಾಜ ಬಲಿಯಾಗುವುದಿಲ್ಲ, ಹಿಂದೂಗಳ ಹಿತಾಸಕ್ತಿಗಳ ರಕ್ಷಣೆಗೆ ಆರ್ಎಸ್ಎಸ್ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಿಯಂಕಾ ಖರ್ಗೆ ಅವರಿಗೆ ಎಚ್ಚರಿಕೆ ನೀಡಿದರು.



