ಹೊಸದಿಗಂತ ವರದಿ, ವಿಜಯನಗರ
ನಗರದ ಬಟ್ರಹಳ್ಳಿ ಆಂಜನೇಯ ಸ್ವಾಮೀ ದೇಗುಲ ಆವರಣದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಪ್ರದರ್ಶಿನಿಗೆ ಬಿಜೆಪಿ ರಾಷ್ಟೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಜೀ ಹಾಗೂ ರಾಜ್ಯ ಬಿಜೆಪಿ ಸಹ ಉಸ್ತುವಾರಿ ಕೆ.ಅರುಣಾ ಜೀ ಅವರು ಶನಿವಾರ ಚಾಲನೆ ನೀಡಿದರು.
ಇದಕ್ಕೂ ಮುನ್ನ ನಡೆದ ಪೂಜಾ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿದ್ದರು. ನಂತರ ನವ ಭಾರತ ನಿರ್ಮಾಣಕ್ಕಾಗಿ ನವ ಕರ್ನಾಟಕ, ಸರ್ಕಾರದ ಯೋಜನೆಗಳು ಹಾಗೂ ಸಾಧನೆಗಳ ಕುರಿತು ಆಯೋಜಿಸಿದ್ದ ಪ್ರದರ್ಶನಕ್ಕೆ ಸಂತೋಷ್ ಜೀ ಅವರು ಚಾಲನೆ ನೀಡಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದ ರಾಜ್ಯ ಸರ್ಕಾರದ ಸಾಧನೆಗಳ ಕುರಿತು ಪ್ರದರ್ಶನ ಹಾಗೂ ಬಿಜೆಪಿ ಕರ್ನಾಟಕ ಇತಿಹಾಸದ ಅಪರೂಪದ ಕ್ಷಣಗಳು, ಅವಿಸ್ಮರಣೀಯ ಘಳಿಗೆಗಳ ಭಾವಚಿತ್ರಗಳನ್ನು ಗಣ್ಯರು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ನಂತರ ವಿಜಯನಗರ ಸಾಮ್ರಾಜ್ಯದ ಶ್ರೀ ಕೃಷ್ಣದೇವರಾಯರ ಪುತ್ಥಳಿ ವೀಕ್ಷಿಸಿ ಆಯೋಜಕರಿಗೆ ಅಭಿನಂದನೆ ಸಲ್ಲಿಸಿದರು.
ನಂತರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಸೇರಿದಂತೆ ಸರ್ಕಾರದ ಜನಪರ ಯೋಜನೆಗಳ ಕುರಿತು ಎಲ್ಇಡಿ ಪರದೆಯಲ್ಲಿ ವೀಕ್ಷಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜೀ, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನಾ, ಸಚಿವರಾದ ಆನಂದ್ ಸಿಂಗ್, ಶಶಿಕಲಾ ಜೊಲ್ಲೆ, ಸುನಿಲ್ ಕುಮಾರ್, ಮಾಜಿ ಸಚಿವ ಲಕ್ಷ್ಮಣ್ ಸವದಿ, ವಿಜಯನಗರ ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ ಪಾಟೀಲ್, ಸಂಸದ ವೈ.ದೇವೆಂದ್ರಪ್ಪ, ಸಪಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಹನುಮಂತಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ