Saturday, March 25, 2023

Latest Posts

ಸಫಾಯಿ ಕರ್ಮಚಾರಿಗಳಿಗೆ ವಸತಿ ಸೌಲಭ್ಯ ಮೀಸಲಿಡಿ: ಶಿವಣ್ಣ ಎಂ. ಕೋಟೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ವಿವಿಧ ವಸತಿ ನಿಗಮಗಳಲ್ಲಿ ಸಫಾಯಿ ಕರ್ಮಚಾರಿಗಳಿಗೆ ವಸತಿ ಸೌಲಭ್ಯ ಮೀಸಲಿರಿಸುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಶಿವಣ್ಣ ಎಂ. ಕೋಟೆ ತಿಳಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಫಾಯಿ ಕರ್ಮಚಾರಿಗಳ ಕಾಯ್ದೆ ಮತ್ತು ನಿಯಮಗಳ ಪ್ರಕಾರ ಪುನರ್ವಸತಿ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ ಕಲ್ಪಿಸಲು ಅನುಕೂಲವಾಗುವಂತೆ ಗುರುತಿನ ಚೀಟಿಗಳನ್ನು ನೀಡಲಾಗುತ್ತಿದ್ದು, ಈಗಾಗಲೇ ಗುರುತಿಸಲ್ಪಟ್ಟ ಒಟ್ಟು 201 ಸಫಾಯಿ ಕರ್ಮಚಾರಿಗಳಲ್ಲಿ ಸಾಂಕೇತಿಕವಾಗಿ 10 ಫಲಾನುಭವಿಗಳಿಗೆ ಅವರು ಇಂದು ಗುರುತಿನ ಚೀಟಿಗಳನ್ನು ವಿತರಿಸಿದರು.

ಈ ಸಮುದಾಯವನ್ನು ಮುಖ್ಯವಾಹಿನಿಗೆ ತರಲು ಗುರುತಿನ ಚೀಟಿ ನೀಡುವುದರಿಂದ ಸರಕಾರದಿಂದ ಯಾವುದೇ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದರು.

ಜಿಲ್ಲಾಧಿಕಾರಿಗಳಾದ ಜೆ. ಮಂಜುನಾಥ್ ರವರು ಅಂಬೇಡ್ಕರ್ ವಸತಿ ಯೋಜನೆಯಡಿ ಮನೆ ನಿರ್ಮಾಣ ಹಾಗೂ ರಾಜೀವ್ ಗಾಂಧಿ ವಸತಿ ಯೋಜನೆ ಮತ್ತು ಮುಖ್ಯಮಂತ್ರಿ ಬಹುಮಹಡಿ ಕಟ್ಟಡದಲ್ಲಿ ನಿರ್ಮಾಣವಾಗುತ್ತಿರುವ ಮನೆಗಳಲ್ಲಿ ಗುರುತಿನ ಚೀಟಿ ಹೊಂದಿರುವವರಿಗೆ ಮನೆಗಳನ್ನು ನೀಡಲು ಮೀಸಲು ಕಲ್ಪಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

ಸಫಾಯಿ ಕರ್ಮಚಾರಿಗಳ ಪುನರ್ವಸತಿ ಹಾಗೂ ಸ್ವಯಂ ಉದ್ಯೋಗಕ್ಕಾಗಿ ಸರಕಾರ 50,000 ರೂ.ಗಳ ವರೆಗಿನ ನೇರ ಸಾಲ ಸೌಲಭ್ಯವನ್ನು ನೀಡುತ್ತಿದೆ. ಆದರೆ ಇದು ಅತ್ಯಂತ ಸಣ್ಣ ಮೊತ್ತವಾಗಿದ್ದು, ಕೇವಲ ಇದರಿಂದ ಅವರು ಹೊಸ ಜೀವನ ಕಟ್ಟಿಕೊಳ್ಳಲು ಸಾಧ್ಯವಾಗುವುದಿಲ್ಲ. ಅಲ್ಲದೇ ಒಮ್ಮೆ ಸಾಲ ಪಡೆದಲ್ಲಿ ಮತ್ತೊಮ್ಮೆ ಸಾಲಕ್ಕೆ ಅರ್ಜಿ ಸಲ್ಲಿಸಲು ಅವರು ಅರ್ಹರಿರುವುದಿಲ್ಲ. ಇದು ಪರೋಕ್ಷವಾಗಿ ಅವರಿಗೆ ಅಭಿವೃದ್ಧಿಯಿಂದ ವಂಚಿತರಾಗಿಸಲಿದೆ ಎಂದು ಅಭಿಪ್ರಾಯ ಪಟ್ಟರು. ಕನಿಷ್ಠ 5 ಲಕ್ಷ ರೂ.ಗಳ ಸಾಲ ನೀಡಬೇಕೆಂದು ಶಿವಣ್ಣ ಸಲಹೆ ನೀಡಿದರು.

ಪುನರ್ವಸತಿ ಭಾಗವಾದ ಕೌಶಲ ತರಬೇತಿ ನೀಡುವ ಉದ್ದೇಶದಿಂದ ಸಫಾಯಿ ಕರ್ಮಚಾರಿಗಳ ಸಹಾಯವಾಣಿಗೆ ಬರುವ ಕರೆಗಳ ಸಂದರ್ಭದಲ್ಲಿ ಫಲಾನುಭವಿಗಳಿಂದ ಯಾವ ರೀತಿಯ ಉದ್ಯಮದಲ್ಲಿ ತೊಡಗಿಕೊಳ್ಳಲು ಇಚ್ಛಿಸುವರು, ಅದಕ್ಕೆ ಯಾವ ರೀತಿಯ ಕೌಶಲ ತರಬೇತಿ ಅಗತ್ಯವಿದೆ ಎಂಬ ಬಗ್ಗೆ ಮಾಹಿತಿ ಕಲೆ ಹಾಕಬೇಕು ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.

201 ಸಫಾಯಿ ಕರ್ಮಚಾರಿಗಳ ಕುಟುಂಬಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದುವರೆಗೂ ವಿದ್ಯಾರ್ಥಿ ವೇತನ ಸೌಲಭ್ಯ ದೊರೆತಿಲ್ಲ ಎಂದು ಸಂಘದ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಆಹವಾಲನ್ನು ಸಲ್ಲಿಸಿದರು. ಇದಕ್ಕೆ ಜಿಲ್ಲಾಧಿಕಾರಿಯವರು ಕಾಲ್ ಸೆಂಟರ್ ಮೂಲಕ ಸೌಲಭ್ಯ ಸಿಗದ ವಿದ್ಯಾರ್ಥಿಗಳ ಮಾಹಿತಿಯನ್ನು ಪಡೆದು ಎರಡು ದಿನಗಳಲ್ಲಿ ಹಣ ಪಾವತಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!