ಹೊಸದಿಗಂತ ವರದಿ ಮಡಿಕೇರಿ:
ಸಕಾಲ ಸಪ್ತಾಹ ಪ್ರಯುಕ್ತ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ವತಿಯಿಂದ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ನೇತೃತ್ವದಲ್ಲಿ ಜಾಗೃತಿ ಜಾಥಾ ನಡೆಯಿತು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ, ಸಾರ್ವಜನಿಕರಿಗೆ ಸಕಾಲದಲ್ಲಿ ವಿವಿಧ ಸೌಲಭ್ಯ ಕಲ್ಪಿಸುವಲ್ಲಿ ಸಕಾಲ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಸರ್ಕಾರದ ಮಹತ್ವಾಂಕ್ಷಿ ಯೋಜನೆಯಾದ ಸಕಾಲ ಕಾರ್ಯಕ್ರಮ 10 ವರ್ಷ ಪೂರೈಸುತ್ತಿರುವ ಹಿನ್ನೆಲೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಕಾಲ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆಯು ಪ್ರಥಮ ಸ್ಥಾನಕ್ಕೆ ಬರಲು ಪ್ರಯತ್ನಿಸಲಾಗಿದೆ. ನಾಗರೀಕರಿಗೆ ನಿಗದಿತ ಕಾಲಮಿತಿಯಲ್ಲಿ ಸರ್ಕಾರದ ಸೇವೆಗಳನ್ನು ಒದಗಿಸುವ ಉದ್ದೇಶದಿಂದ 2012ರ ಏ.2 ರಂದು ಸಕಾಲ ಯೋಜನೆಯನ್ನು ರಾಜ್ಯಾದ್ಯಂತ ಸರ್ಕಾರ ಜಾರಿಗೊಳಿಸಿತ್ತು. ಸಕಾಲ ಯೋಜನೆ ಆರಂಭವಾಗಿ 10 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ ಮಾಹೆಯಲ್ಲಿ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಲೋಕೋಪಯೋಗಿ ಇಲಾಖೆಯ ಇಇ ನಾಗರಾಜು, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ಶಬಾನಾ ಎಂ.ಷೇಕ್, ತಹಶೀಲ್ದಾರ್ ಮಹೇಶ್, ತಾ.ಪಂ.ಇಒ ಶೇಖರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಮೋದ್, ಕೃಷಿ ಇಲಾಖೆಯ ಉಪ ನಿರ್ದೇಶಕ ಮುತ್ತುರಾಜ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಪೊಲೀಸ್ ಇನ್ಸ್ಪೆಕ್ಟರ್ ಪಿ.ವಿ.ವೆಂಕಟೇಶ್ ಮತ್ತಿತರರು ಇದ್ದರು.