ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಿಲ್ಲಾಡಳಿತದ ವಿರೋಧದ ನಡುವೆಯೂ ಭಾನುವಾರ ರಾತ್ರಿ ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆ ಅನಾವರಣಗೊಂಡಿದೆ.
ಬೆಳಗಾವಿ ದಕ್ಷಿಣ ಬಿಜೆಪಿ ಶಾಸಕ ಅಭಯ್ ಪಾಟೀಲ್ ನೇತೃತ್ವದಲ್ಲಿ ಮಹಾರಾಷ್ಟ್ರ ಸಂಪುಟ ಸಚಿವ ಶಿವೇಂದ್ರರಾಜೇ ಭೋಸ್ಲೆ ಅವರು ಪ್ರತಿಮೆಯನ್ನು ಅನಾವರಣಗೊಳಿಸಿದರು. ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಅವರು ಚುನಾವಣೆಯಲ್ಲಿ ಬೆಳಗಾವಿ ದಕ್ಷಿಣದ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಅಭ್ಯರ್ಥಿ ರಾಮಕಾಂತ್ ಕೊಂಡುಸ್ಕರ್ ಅವರನ್ನು ಸೋಲಿಸಿದ್ದರು. ಈ ನಡುವೆ ಛತ್ರಪತಿ ಸಂಭಾಜಿಯವರ ಪ್ರತಿಮೆಯನ್ನು ಕೆಲಸ ಪೂರ್ಣಗೊಳ್ಳದ ಕಾರಣವನ್ನು ನೀಡಿದ ಕೊಂಡುಸ್ಕರ್ ಅವರು, ಪ್ರತಿಮೆ ಅನಾವರಣಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಈ ಮಧ್ಯೆ ಸಚಿವ ಜಾರಕಿಹೊಳಿಯವರೂ ಕೊಂಡುಸ್ಕರ್ ಅವರಿಗೆ ಬೆಂಬಲ ಸೂಚಿಸಿದ್ದರು.
ಇದರ ಬೆನ್ನಲ್ಲೇ ಪ್ರತಿಮೆ ಅನಾವರಣ ಕಾರ್ಯಕ್ರಮ ರಾಜಕೀಯ ಜಟಾಪಟಿಗೆ ಕಾರಣವಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮಂಡಳಿ ಪ್ರತಿಮೆ ಅನಾವರಣಕ್ಕೆ ಅನುಮತಿ ನಿರಾಕರಿಸಿತ್ತು. ಪ್ರತಿಮೆ ಅನಾವರಣ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಮತ್ತು ಭಾನುವಾರದ ಕಾರ್ಯಕ್ರಮಕ್ಕೆ ಯಾವುದೇ ಅನುಮತಿ ನೀಡಲಾಗಿಲ್ಲ ಎಂದು ಬೆಳಗಾವಿಯ ಉಪ ಆಯುಕ್ತರು ಘೋಷಿಸಿದ್ದರು.