ಕನ್ನಡ ಚಿತ್ರರಂಗದ ಹಿರಿಯ ನಟ, ‘ಕಲಾತಪಸ್ವಿ’ ರಾಜೇಶ್‌ ವಿಧಿವಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಸ್ಯಾಂಡಲ್‌ ವುಡ್‌ ನ ಹಿರಿಯ ನಟ, ಕಲಾತಪಸ್ವಿ ರಾಜೇಶ್‌ (82) ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆ ಹಾಗೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮುಂಜಾನೆ 2:30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.
ಇಂದು ಸಂಜೆ 6:30ಕ್ಕೆ ರಾಜೇಶ್‌ ಅವರ ಪಾರ್ಥೀವ ಶರೀರವನ್ನು ವಿದ್ಯಾರಣ್ಯಪುರದಲ್ಲಿರುವ ತಮ್ಮ ನಿವಾಸದಲ್ಲಿ ಇರಿಸಿ ಬಳಿಕ ಅಂತ್ಯಕ್ರಿಯೆ ನಡೆಸಲಾಗುತ್ತದೆ.
ರಾಜೇಶ್‌ ಅವರ ಮೂಲ ಹೆಸರು ಮುನಿ ಚೌಡಪ್ಪ. ಬಾಲ್ಯದಿಂದಲೂ ನಟನೆಯಲ್ಲಿ ಆಸಕ್ತಿ ಹೊಂದಿದ್ದ ಇವರು ರಂಗಭೂಮಿ ಪ್ರವೇಶಿಸಿದರು. ರಂಗಭೂಮಿಯಲ್ಲಿ ‘ವಿದ್ಯಾಸಾಗರ್’ ಹೆಸರಿನಿಂದ ಗುರುತಿಸಿಕೊಂಡರು.
1960ರಲ್ಲಿ ಹುಣಸೂರು ಕೃಷ್ಣಮೂರ್ತಿ ಅವರ ‘ವೀರ ಸಂಕಲ್ಪ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. 1968ರಲ್ಲಿನ ‘ನಮ್ಮ ಊರು’ ಸಿನಿಮಾದ ಮೂಲಕ ತಮ್ಮ ಹೆಸರನ್ನು ವಿದ್ಯಾಸಾಗರ್‌ ಇಂದ ರಾಜೇಶ್‌ ಎಂದು ಬದಲಾಯಿಸಿಕೊಂಡರು.
‘ಕಪ್ಪು ಬಿಳುಪು’, ‘ಬೃಂದಾವನ’, ‘ಬೋರೆ ಗೌಡ ಬೆಂಗಳೂರಿಗೆ ಬಂದ’, ‘ನಮ್ಮ ಊರು’, ‘ಗಂಗೆ ಗೌರಿ’, ‘ಸತೀ ಸುಕನ್ಯ’, ಬೆಳುವಲದ ಮಡಿಲಲ್ಲಿ’, ‘ಮರೆಯದ ದೀಪಾವಳಿ’, ‘ಪ್ರತಿಧ್ವನಿ’, ‘ಕಾವೇರಿ’, ‘ದೇವರ ಗುಡಿ’, ‘ಬದುಕು ಬಂಗಾರವಾಯ್ತು’, ‘ಸೊಸೆ ತಂದ ಸೌಭಾಗ್ಯ’, ‘ಮುಗಿಯದ ಕಥೆ’, ‘ಬಿಡುಗಡೆ’, ‘ದೇವರದುಡ್ಡು’, ‘ಕಲಿಯುಗ’ ಸೇರಿ 150ಕ್ಕೂ ಹೆಚ್ಚು ಸಿನಿಮಾದಲ್ಲಿ ನಟಿಸಿದ್ದಾರೆ.
2012ರಲ್ಲಿ ರಾಜೇಶ್‌ ಅವರ ಅದ್ಭುತ ನಟನೆಗೆ ಧಾರವಾಡದ ಕರ್ನಾಟಕ ವಿವಿ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!