ಹೊಸದಿಗಂತ ವರದಿ, ಕುಶಾಲನಗರ:
ಶ್ರೀಗಂಧದ ಮರವನ್ನು ಕಡಿದು ಸಾಗಿಸುತ್ತಿದ್ದ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಶಿರಂಗಾಲ ಗ್ರಾಮದ ಬಿ.ಕೆ.ವಿಜಯ ಮತ್ತು ಎಸ್.ಪಿ.ಗಣೇಶ್ ಬಂಧಿತ ಆರೋಪಿಗಳಾಗಿದ್ದು, ತಲೆಮರೆಸಿಕೊಂಡಿರುವ ರಾಘವ ಎಂಬವರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ.
ಕೂಡಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಜೇನುಕಲ್ಲುಬೆಟ್ಟ ಮೀಸಲು ಅರಣ್ಯ ಪ್ರದೇಶ ವ್ಯಾಪ್ತಿಯ ಚಿಕ್ಕನಾಯಕನ ಹೊಸಳ್ಳಿ ಗ್ರಾಮದ ಸರ್ವೆ ನಂಬರ್ 25 ರಲ್ಲಿ ಶ್ರೀಗಂದದ ಮರವನ್ನು ಕಡಿದು ತುಂಡುಗಳನ್ನಾಗಿ ಮಾಡಿ ಸಾಗಿಸುತ್ತಿರುವ ಸಂದರ್ಭ ಡಿಎಫ್ಒ ಕೆ.ಟಿ.ಪೂವಯ್ಯ ಹಾಗೂ ಎಸಿಎಫ್ ಗೋಪಾಲ್ ಮಾರ್ಗದರ್ಶನದಲ್ಲಿ ವಲಯ ಅರಣ್ಯಾಧಿಕಾರಿ ಎಚ್.ಪಿ.ಚೇತನ್ ನೇತೃತ್ವದಲ್ಲಿ ಹೆಬ್ಬಾಲೆ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಎಂ.ಕೆ.ಭರತ್ ಕಾರ್ಯಾಚರಣೆ ನಡೆಸಿ ಮಾಲು ಸಮೇತ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಅರಣ್ಯ ಪಾಲಕ ಎಚ್.ಎಸ್.ಲೋಕೇಶ್, ಅರಣ್ಯ ವೀಕ್ಷಕ ರಾಜಪ್ಪ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದರು.