ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಳ್ಳಾರಿ ಜಿಲ್ಲೆಯ ಪ್ರಸಿದ್ಧ ಸಂಡೂರು ರಾಜವಂಶಕ್ಕೆ ಸೇರಿದ ಕಾರ್ತಿಕೇಯ ಘೋರ್ಪಡೆ ಇಂದು ಮಂಗಳವಾರ ಮುಂಜಾನೆ ನಿಧನರಾಗಿದ್ದಾರೆ. ಬೆಂಗಳೂರಿನ ಅವರ ನಿವಾಸದಲ್ಲಿ ಬೆಳಿಗ್ಗೆ 6 ಗಂಟೆಯ ಸುಮಾರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದರಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಕೌಟುಂಬಿಕ ಮೂಲಗಳು ತಿಳಿಸಿವೆ.
ರಾಜಕೀಯ ಹಿನ್ನೆಲೆ ಮತ್ತು ಪ್ರಭಾವ
ಕಾರ್ತಿಕೇಯ ಘೋರ್ಪಡೆ ಕೇವಲ ರಾಜಮನೆತನಕ್ಕೆ ಸೀಮಿತವಾಗಿರದೆ ರಾಜಕೀಯ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದರು. ಅವರು ಸಂಡೂರು ಸಂಸ್ಥಾನದ ಮಹಾರಾಜ ಮತ್ತು ಕರ್ನಾಟಕ ಸರ್ಕಾರದ ಮಾಜಿ ಹಣಕಾಸು ಸಚಿವರಾಗಿದ್ದ ಎಂ. ವೈ. ಘೋರ್ಪಡೆಯ ಪುತ್ರರಾಗಿದ್ದರು. ಬಳ್ಳಾರಿ ಜಿಲ್ಲಾ ಭಾರತೀಯ ಜನತಾ ಪಕ್ಷದಲ್ಲಿ ಕಾರ್ತಿಕೇಯ ಘೋರ್ಪಡೆ ಸಾಕಷ್ಟು ಪ್ರಭಾವ ಹೊಂದಿದ್ದರು. 2018 ರ ಅವಧಿಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದ ಅವರು, ಪಕ್ಷದ ಹಲವು ಸಕ್ರಿಯ ಚಟುವಟಿಕೆಗಳಲ್ಲಿ ಹಾಗೂ ನಾಯಕರ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದರು. ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿದಂತೆ ರಾಷ್ಟ್ರ ಮಟ್ಟದ ಹಲವು ಹಿರಿಯ ನಾಯಕರ ಆಪ್ತ ವಲಯದಲ್ಲಿ ಅವರು ಗುರುತಿಸಿಕೊಂಡಿದ್ದರು.
ಇಂದು ಸಂಜೆ ಸಂಡೂರಿನಲ್ಲಿ ಅಂತ್ಯಕ್ರಿಯೆ
ಕಾರ್ತಿಕೇಯ ಘೋರ್ಪಡೆ ಹಠಾತ್ ನಿಧನಕ್ಕೆ ಬಳ್ಳಾರಿ ಜಿಲ್ಲೆಯ ಗಣ್ಯರು, ಬಿಜೆಪಿ ಮುಖಂಡರು ಹಾಗೂ ಸಂಡೂರಿನ ಸಾರ್ವಜನಿಕರು ತೀವ್ರ ಸಂತಾಪ ಸೂಚಿಸಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಸಂಡೂರಿಗೆ ಕೊಂಡೊಯ್ಯಲಾಗುತ್ತಿದ್ದು, ಇಂದು ಸಂಜೆ ರಾಜಮನೆತನದ ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಸಂಡೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದು ಬಂದಿದೆ.



