ಹೊಸ ದಿಗಂತ ಡಿಜಿಟಲ್ ಡೆಸ್ಕ್:
ತಿಹಾರ್ ಜೈಲಿನಲ್ಲಿ ಕುಸಿದು ಬಿದ್ದು ಆಸ್ಪತ್ರೆ ಸೇರಿರುವ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಸತ್ಯೇಂದ್ರ ಜೈನ್ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.
ಜೈನ್ ಅವರನ್ನು ಮೊದಲು ದೀನ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಲೋಕ ನಾಯಕ ಜೈ ಪ್ರಕಾಶ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಜೈನ್ ಅವರನ್ನು ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಬಂಧಿಸಿದೆ.
ವಿಚಾರಣಾಧೀನ ಕೈದಿಯಾಗಿರುವ ಸತ್ಯೇಂದ್ರ ಜೈನ್ ಅವರು ಬೆಳಗ್ಗೆ ಸುಮಾರು 6ರ ವೇಳೆ ಕೇಂದ್ರ ಕಾರಾಗೃಹದ ವೈದ್ಯಕೀಯ ತಪಾಸಣೆ ಕೊಠಡಿಯ ಸ್ನಾನಗೃಹದಲ್ಲಿ ಜಾರಿ ಬಿದ್ದಿದ್ದಾರೆ. ನಿಶ್ಯಕ್ತಿಯ ಕಾರಣದಿಂದ ಅವರನ್ನು ಕಾರಾಗೃಹ ಆಸ್ಪತ್ರೆಯಲ್ಲಿರಿಸಿ ನಿಗಾ ಇಡಲಾಗಿತ್ತು ಎಂದು ಜೈಲಿನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಜೈನ್ ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. ‘ಈ ಪ್ರತಿಕೂಲ ಸನ್ನಿವೇಶದ ವಿರುದ್ಧ ಹೋರಾಡಲು ದೇವರು ಅವರಿಗೆ ಶಕ್ತಿ ನೀಡಲಿ’ ಎಂದು ಪ್ರಾರ್ಥಿಸಿದ್ದಾರೆ.