ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರ, ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸರ್ಕಾರದ ಯೋಜನೆಗಳು ಶೇ. 95 ರಷ್ಟು ಹಳ್ಳಿಗಳಿಗೆ ತಲುಪಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಕೆ ಆರ್ ಕ್ಷೇತ್ರದಿಂದ ಆಯ್ಕೆಯಾಗಿರುವ ಶ್ರೀವತ್ಸ, ಮೇಯರ್ ಶಿವಕುಮಾರ್, ಮಾಜಿ ಎಂಎಲ್.ಸಿ ಸಿದ್ಧರಾಜು, ಸ್ಥಳೀಯ ಬಿಜೆಪಿ ಮುಖಂಡರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಸಾಥ್ ನೀಡಿದರು.
ನಂತರ ಶೋಭಾ ಕರಂದ್ಲಾಜೆ ಮಾತನಾಡಿ, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸೋಲು ಗೆಲುವು ಸಾಮಾನ್ಯ. ಸೋಲನ್ನ ಸ್ಚೀಕರಿಸಿದ್ದೇವೆ, ಬರುವಂತಹ ದಿನಗಳಲ್ಲಿ ಒಳ್ಳೆಯ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ. ಗೆಲುವು ಸಾಧಿಸಿದವರಿಗೆ ಶುಭವಾಗಲಿ. ಕೊಟ್ಟಿರುವ ಭರವಸೆಗಳನ್ನ ಈಡೇರಿಸಲಿ ಎಂದರು.
ಮುಖ್ಯಮಂತ್ರಿ ಆಯ್ಕೆ ವಿಚಾರ ಅವರ ಪಕ್ಷದ ಆಂತರಿಕ ವಿಚಾರ. ಇನ್ನೇನು ಭರವಸೆ ಕೊಟ್ಟಿದ್ದಾರೋ ನಮಗೆ ಗೊತ್ತಿಲ್ಲ. ಅವರ ಆಂತರಿಕ ಸಮಸ್ಯೆಯನ್ನ ಅವರೇ ಬಗ್ಗೆಹರಿಸಿಕೊಳ್ಳುತ್ತಾರೆ ಎಂದು ಹೇಳಿದರು.
ಇಂದು ದೇಶಾದ್ಯಂತ ಯುವಕ ಯುವತಿಯರಿಗೆ 71 ಸಾವಿರ ಕೇಂದ್ರ ಸರ್ಕಾರದ ಉದ್ಯೋಗ ನೀಡಲಾಗುತ್ತಿದೆ. ಇದಕ್ಕೆ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಯುವಕ ಯುವತಿಯರಿಗೆ ಕೆಲಸ ಸಿಗಲಿದೆ. ನಮ್ಮ ಸರ್ಕಾರ ಬಂದ ಬಳಿಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇಡೀ ದೇಶಾದ್ಯಂತ ಉದ್ಯೋಗ ಮೇಳದ ಮೂಲಕ ಉದ್ಯೋಗ ಕೊಡುವ ಕಾರ್ಯಕ್ರಮ ನಡೆಯುತ್ತಿದೆ. ನಿರುದ್ಯೋಗ ಸಮಸ್ಯೆ ಬಗೆಹರಿಸಲು ಇಂದು ಉದ್ಯೋಗ ಮೇಳ ಸಹಕಾರಿಯಾಗುತ್ತಿದೆ ಎಂದು ಕೇಂದ್ರ ಸಚಿವೆ ಶೋಭಾ ಕರದ್ಲಾಂಜೆ ತಿಳಿಸಿದರು.