ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ನಾಳೆಯಿಂದ ಶಾಲೆ ಪ್ರಾರಂಭವಾಗುತ್ತಿದೆ. ಎಲ್ಲಾ ತರಗತಿಗಳು ನಿರಾತಂಕವಾಗಿ ಸಾಗಬೇಕು ಹಾಗೂ ಮೊದಲಿನಂತೆ ಸೌಹಾರ್ದಯುತವಾಗಿ ವಿದ್ಯಾರ್ಥಿಗಳು ಶಾಲೆಗೆ ಬಂದು ಹೋಗಬೇಕು ಎನ್ನುವ ಬಗ್ಗೆ ನಮ್ಮ ಹೆಚ್ಚಿನ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರೌಢಶಾಲೆಗಳು ಹೇಗೆ ನಡೆಯುತ್ತದೆ ಎಂದು ಗಮನಿಸಿದ ಬಳಿಕ ಕಾಲೇಜು ತೆರೆಯುವ ಬಗ್ಗೆ ತೀರ್ಮಾನಿಸಲಾಗುತ್ತದೆ. ಎಲ್ಲಾ ಶಾಲೆಗಳ ಸುತ್ತಮುತ್ತ ಅಧಿಕಾರಿಗಳು ತೀವ್ರ ಕಟ್ಟೆಚ್ಚರ ವಹಿಸಲಿದ್ದಾರೆ.
ಹೈ ಕೋರ್ಟ್ ಸೂಚನೆಯಂತೆ ತರಗತಿಗಳನ್ನು ಆರಂಭ ಮಾಡುತ್ತಿದ್ದೇವೆ. ಶಾಲೆಗಳಿಗೆ ಹಿಜಾಬ್ ಅಥವಾ ಕೇಸರಿ ಶಾಲಿನ ಅನುಮತಿ ಇಲ್ಲ. ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರದಲ್ಲಿ ತೆರಳುವಂತೆ ಸೂಚಿಸಲಾಗಿದೆ. ಹಿಜಾಬ್ ವಿವಾದ ಸೃಷ್ಟಿಸುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಈಗಾಗಲೇ ಶಾಲೆಯ ಆಡಳಿತ ಮಂಡಳಿ, ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ, ಶಾಂತಿಯುತ ತರಗತಿ ನಡೆಸಲು ಸೂಚಿಸಲಾಗಿದೆ. ಯಾರೂ ಕೂಡ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಬಾರದು ಎಂದಿದ್ದಾರೆ.