ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಲಾ ಸೇವಾ ಆಯೋಗದ (ಎಸ್ಎಸ್ಸಿ) ನೇಮಕಾತಿ ಹಗರಣ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಸಚಿವ ಮತ್ತು ಟಿಎಂಸಿ ನಾಯಕ ಪಾರ್ಥ ಚಟರ್ಜಿ ಅವರ ಮನೆ ಮೇಲೆ ಇಡಿ ದಾಳಿ ನಡೆಸಿದ್ದು ಶೋಧ ಕಾರ್ಯ ನಡೆಸುತ್ತಿದೆ.
ಜೂನ್ 29 ರಂದು, ರಾಜ್ಯ ಅನುದಾನಿತ ಶಾಲೆಗಳಿಗೆ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿಯಲ್ಲಿ ಅಕ್ರಮ ಹಣ ವರ್ಗಾವಣೆಯ ಕುರಿತು ಜಾರಿನಿರ್ದೇಶನಾಲಯವು ತನಿಖೆಯನ್ನು ಪ್ರಾರಂಭಿಸಿದ್ದು, ಎಸ್ಸೆಸ್ಸೆಲ್ಸಿ ಮೂಲಕ ನೇಮಕಗೊಂಡ ಶಿಕ್ಷಕರ ನೇಮಕಾತಿಯಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಶಂಕೆ ವ್ಯಕ್ತವಾಗಿದೆ. ಈ ಪ್ರಕರಣದಲ್ಲಿ ಹಲವು ಪ್ರಭಾವಿ ವ್ಯಕ್ತಿಗಳ ಹೆಸರು ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಇಡಿ ಎರಡು ಎಫ್ಐಆರ್ ದಾಖಲಿಸಿದೆ ಎಂದು ಮೂಲಗಳು ವರದಿ ಮಾಡಿವೆ.
ಪಾರ್ಥ ಚಟರ್ಜಿಯವರು ಅನುಮೋದಿಸಿದ ಉನ್ನತ ಅಧಿಕಾರದ ಮೇಲ್ವಿಚಾರಣಾ ಸಮಿತಿಯು ಹಗರಣದ ಮೂಲ ಎಂದು ಕಲ್ಕತ್ತಾ ಹೈಕೋರ್ಟ್ ಈ ಹಿಂದೆ ಗಮನಿಸಿತ್ತು. ಈ ಕುರಿತು ಸಿಬಿಐ ತನಿಖೆಗೆ ಆದೇಶ ನೀಡಿತ್ತು.
ಚಟರ್ಜಿ ಅವರು ಮೇ 18 ರಂದು ಮೊದಲ ಎರಡು ಬಾರಿ ಸಿಬಿಐ ವಿಚಾರಣೆಗೆ ಹಾಜರಾಗಿದ್ದರು ಮತ್ತು ಮೇ 25 ರಂದು ಮತ್ತೊಮ್ಮೆ ವಿಚಾರಣೆಗೆ ಹಾಜರಾಗಿದ್ದರು. ತಾನು ಸಮಿತಿಯನ್ನು ರಚಿಸಿದ್ದೇನೆ ಆದರೆ ಅದರ ಮೇಲೆ ಯಾವುದೇ ನಿಯಂತ್ರಣವಿಲ್ಲ ಎಂದು ಅವರು ವಿಚಾರಣೆಯ ಸಮಯದಲ್ಲಿ ಸಿಬಿಐಗೆ ತಿಳಿಸಿದ್ದರು ಎಂದು ವರದಿಯಾಗಿದೆ.