ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಸ್ಟ್ 1ರಂದು ಮೈಸೂರಿಗೆ ಆಗಮಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಅಯೋಧ್ಯೆ ರಾಮಲಲ್ಲಾ ಮೂರ್ತಿಯ ಶಿಲ್ಪಿ ಅರುಣ್ ಯೋಗಿರಾಜ್ನಿಂದ ಪ್ರಧಾನಿ ಮೋದಿಗೆ 8.5 ಕೆಜಿ ಸ್ವಾಮಿ ವಿವೇಕಾನಂದರ ಪ್ರತಿಮೆ ಉಡುಗೊರೆಯಾಗಿ ಸಿಗಲಿದೆ.
ಅಯೋಧ್ಯೆಯ ರಾಮಮಂದಿರದಲ್ಲಿರುವ ರಾಮಲಲ್ಲಾ ಮೂರ್ತಿಯನ್ನು ಕೆತ್ತಿದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ಉಡುಗೊರೆಯಾಗಿ 8.5 ಕೆಜಿ ತೂಕದ ಏಕಶಿಲೆಯ ಅಮೃತಶಿಲೆಯ ಬಾಲ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ನಿರ್ಮಿಸಿದ್ದಾರೆ. ಈ ಪ್ರತಿಮೆಯನ್ನು ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದಲ್ಲಿ ಪ್ರಧಾನಿ ಮೋದಿ ಅವರಿಗೆ ಸಮರ್ಪಿಸಲಾಗುತ್ತದೆ.
ಈ ಪ್ರತಿಮೆಯನ್ನು ಮೈಸೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ಮುಕ್ತಿದಾನಂದ ಮಹಾರಾಜ್ ಅವರ ಮನವಿಯ ಮೇರೆಗೆ ಅರುಣ್ ಯೋಗಿರಾಜ್ ಕೇವಲ 15 ದಿನಗಳಲ್ಲಿ ಪೂರ್ಣಗೊಳಿಸಿದ್ದಾರೆ. ಈ ಅವಕಾಶ ಪ್ರಧಾನಿ ಮೋದಿ ಅವರ ಮೈಸೂರು ಭೇಟಿ ಖಚಿತಗೊಂಡ ಬಳಿಕ ದೊರೆಯಿತು ಎಂದು ಯೋಗಿರಾಜ್ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಮೋದಿ ಅವರು ಆಗಸ್ಟ್ 1ರಂದು ಮೈಸೂರಿನ ವಿವೇಕ ಸ್ಮಾರಕವನ್ನು ಉದ್ಘಾಟಿಸಲಿದ್ದು, ಈ ಸಂದರ್ಭದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಅವರಿಗೆ ಉಡುಗೊರೆಯಾಗಿ ನೀಡಲಾಗುತ್ತದೆ.



