ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಸದ್ಯ ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ ಎಂದು ಸಿದ್ದರಾಮಯ್ಯ ಹೇಳಿದರು.
ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವ ಅಮಿತ್ ಶಾ ಅವರ ಕರ್ತವ್ಯವಾಗಿದೆ.
ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ ಎಂದರು.
ಪ್ರತಾಪ್ ಸಿಂಹ ನನ್ನು ವಿಚಾರಣೆಗೆ ಒಳಪಡಿಸಿ
ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ಮೋದಿ ಅವರದ್ದಾಗಿದೆ ಎಂದರು.