ಹೊಸದಿಗಂತ ವರದಿ,ಶಿವಮೊಗ್ಗ:
ವಿಮಾನ ನಿಲ್ದಾಣ ಕಾಮಗಾರಿಯನ್ನು ತನಿಖೆಗೆ ಒಳಪಡಿಸಲಿ. ಅದಕ್ಕೂ ಮೊದಲು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಅಲ್ಲಿ ಆಗಿರುವ ಕಾಮಗಾರಿಗಳನ್ನು ಕಣ್ಣಾರೆ ನೋಡಲಿ ಎಂದು ಸಂಸದ ಬಿ.ವೈ. ರಾಘವೇಂದ್ರ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿ, ಕಾಂಗ್ರೆಸ್ನ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರ ಬಗ್ಗೆ ನನಗೆ ಗೌರವ ಇದೆ. ಆದರೆ ಅವರು ಎಂದೂ ವಿಮಾನ ನಿಲ್ದಾಣಕ್ಕೆ ಭೇಟಿ ನೀಡದೆ ಆರೋಪಿಸುತ್ತಿದ್ದಾರೆ. ಅವರಿಗೆ ವಾಸ್ತವ ಕೂಡ ಗೊತ್ತಿಲ್ಲ. ಅತ್ಯಂತ ಕಡಿಮೆ ವೆಚ್ಚದಲ್ಲಿ ನಿರ್ಮಾಣವಾದ ಹೆಚ್ಚು ಗುಣಮಟ್ಟದ ವಿಮಾನ ನಿಲ್ದಾಣ ಇದಾಗಿದೆ. ಇಡೀ ರಾಜ್ಯದಲ್ಲಿಯೇ ಅದು 2ನೇ ದೊಡ್ಡ ನಿಲ್ದಾಣವಾಗಿದೆ ಎಂದು ತಿರುಗೇಟು ನೀಡಿದ್ದಾರೆ.
ವಿಮಾನ ನಿಲ್ದಾಣದ ಅಂದಾಜು ವೆಚ್ಚ ಆರಂಭದಲ್ಲಿ ಕಡಿಮೆ ಇತ್ತು ನಿಜ. ಆದರೆ ಬರಬರುತ್ತಾ ಅದರ ವಿನ್ಯಾಸ, ಒಳ್ಳೆಯ ಸೌಲಭ್ಯ, ಅಂತರಾಷ್ಟ್ರೀಯ ಗುಣಮಟ್ಟಕ್ಕೆ ಏರಿಸಲಾಗಿದೆ. ಹಾಗಾಗಿಯೇ ವೆಚ್ಚ ಹೆಚ್ಚಾಗಿದೆ. ಯಾವ ಮಾಹಿತಿ ಇಲ್ಲದೇ ಈ ರೀತಿ ಆರೋಪ ಮಾಡುವುದು ಸರಿಯಲ್ಲ. ತನಿಖೆ ಮಾಡಲಿ ಎಂದರು.