ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಸರ್ಕಾರದ ಸಾಲದ ಬಗ್ಗೆ ಬಿಜೆಪಿ ಮಾಡುತ್ತಿರುವ ಟೀಕೆಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.
ಬಜೆಟ್ ವಿಚಾರವಾಗಿ ಸಾಲಾರಾಮಯ್ಯ ಎಂದು ವ್ಯಂಗ್ಯ ಮಾಡಿದ್ದ ಬಿಜೆಪಿ ವಿರುದ್ಧ ಕಿಡಿ ಕಾರಿದ ಖರ್ಗೆ, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ದೊಡ್ಡ ಮೊತ್ತದ ಅನುದಾನ ಬಿಡುಗಡೆಯಾಗದ ಕಾರಣವೇ ಸಾಲದ ಹೊರೆ ಹೆಚ್ಚಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಇದನ್ನೂ ಓದಿ:
ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಸುಮಾರು 80 ಸಾವಿರ ಕೋಟಿ ರೂಪಾಯಿ ಇನ್ನೂ ನೀಡಿಲ್ಲ. ಈ ಕಾರಣದಿಂದ ಸರ್ಕಾರಕ್ಕೆ ಸಾಲ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಎಎಒ ಯೋಜನೆಯಡಿ ಕೇಂದ್ರದ ಪಾಲಾಗಿದ್ದ 15 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯವೇ ಭರಿಸಿದೆ. ಜೊತೆಗೆ ಪಂಚಾಯಿತಿಗಳಿಗೆ ನೀಡಬೇಕಾದ 15ನೇ ಹಣಕಾಸು ಆಯೋಗದ ಅನುದಾನವೂ ಇನ್ನೂ ಬಂದಿಲ್ಲ ಎಂದು ಹೇಳಿದರು.
ಕೇಂದ್ರ ಸರ್ಕಾರದ ಹಲವಾರು ಯೋಜನೆಗಳಿಗೆ ರಾಜ್ಯವೇ ಹಣ ಒದಗಿಸುತ್ತಿದೆ. ಆದರೆ ರಾಜ್ಯ ಸಾಲ ಮಾಡುತ್ತಿದೆ ಎಂಬುದನ್ನು ಮಾತ್ರ ಬಿಜೆಪಿ ದೊಡ್ಡ ವಿಷಯವಾಗಿ ಹೇಳುತ್ತಿದೆ ಎಂದು ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು. ದೇಶದ ಆಡಳಿತ ನಡೆಸಲು ಪ್ರಧಾನಿ ನರೇಂದ್ರ ಮೋದಿ ಕೂಡ ದೊಡ್ಡ ಪ್ರಮಾಣದಲ್ಲಿ ಸಾಲ ಮಾಡಿದ್ದಾರೆ ಎಂದು ಅವರು ಪ್ರತಿಕ್ರಿಯಿಸಿದರು.



