ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಎರಡು ಭೀಕರ ಅಪಘಾತಗಳು ಸಂಭವಿಸಿದ್ದು, ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಓಮ್ನಿ-ಗೂಡ್ಸ್ ಗಾಡಿ ಡಿಕ್ಕಿ
ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ಕೊತ್ತನೂರು ಗೇಟ್ ಸಮೀಪ ಓಮ್ನಿ ಹಾಗೂ ಮಿನಿ ಗೂಡ್ಸ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ್ದು, ಮಲ್ಲಿಕಾರ್ಜುನಪುರ ಗ್ರಾಮದ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ.
ಹತ್ತು ಮಂದಿ ಕಾರ್ಮಿಕರನ್ನು ಹೂವು ಕಟಾವು ಮಾಡಲು ಓಮ್ನಿಯಲ್ಲಿ ಹುಜಗೂರು ಗ್ರಾಮಕ್ಕೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಗೂಡ್ಸ್ ವಾಹನ ಡಿಕ್ಕಿಯಾಗಿ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಏಳು ಮಂದಿಗೆ ಗಾಯಗಳಾಗಿದ್ದು, ಶಿಡ್ಲಘಟ್ಟ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ ಕಾರು ಪಲ್ಟಿ
ಕೋಲಾರದ ಕೆಜಿಎಫ್ ಬಳಿಯ ದೊಡ್ಡಕಾರಿ ಗ್ರಾಮದ ಬಳಿ ಇರುವ ಚೆನ್ನೈ ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ ತಿರುಪತಿ ದರುಶನ ಮುಗಿಸಿ ಬೆಂಗಳೂರಿಗೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದ್ದು, ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರಿನ ದೇವೇಂದ್ರ ಕುಮಾರ್, ಜಿಷ್ಣು, ದೀಕ್ಷಿತಾ, ಶಾರದಾಬಾಯಿ ಮೃತರು.



