ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಳವಳ್ಳಿ ತಾಲೂಕಿನ ಬಸವನಪುರ ಗೇಟ್ ಸಮೀಪ ಸಂಭವಿಸಿದ ಸರಣಿ ರಸ್ತೆ ಅಪಘಾತದಲ್ಲಿ ಗಾರ್ಮೆಂಟ್ಸ್ ಉದ್ಯೋಗಕ್ಕೆ ತೆರಳುತ್ತಿದ್ದ 30ಕ್ಕೂ ಹೆಚ್ಚು ಮಹಿಳೆಯರು ಗಾಯಗೊಂಡಿದ್ದಾರೆ.
ಎರಡು ಖಾಸಗಿ ಬಸ್ಗಳು ಹಾಗೂ ಒಂದು ಟೆಂಪೋ ನಡುವೆ ಸಂಭವಿಸಿದ ಈ ಅವಘಡದಿಂದ ಕೆಲಕಾಲ ಸಂಚಾರಕ್ಕೂ ಅಡಚಣೆ ಉಂಟಾಯಿತು.
ಪ್ರಾಥಮಿಕ ಮಾಹಿತಿಯಂತೆ, ರಸ್ತೆಗೆ ಏಕಾಏಕಿ ಬಂದ ಬೈಕ್ಗೆ ಡಿಕ್ಕಿ ತಪ್ಪಿಸಲು ಚಾಲಕ ಯತ್ನಿಸಿದ ವೇಳೆ ಬಸ್ ನಿಯಂತ್ರಣ ತಪ್ಪಿ, ಎದುರಿದ್ದ ಮತ್ತೊಂದು ಬಸ್ ಮತ್ತು ಟೆಂಪೋಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ 17 ಮಹಿಳೆಯರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಯ ಬಳಿಕ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಚಿಕಿತ್ಸೆ ವ್ಯವಸ್ಥೆಯಲ್ಲಿ ಯಾವುದೇ ಕೊರತೆ ಆಗದಂತೆ ವೈದ್ಯರು ಹಾಗೂ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳನ್ನು ನೀಡಿದರು.



