ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಬಕಾರಿ ನೀತಿಯ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಗೆ ಮತ್ತೆ ಜೈಲೂಟವೇ ಗತಿಯಾಗಿದೆ.
ಇ.ಡಿ ಅಧಿಕಾರಿಗಳಿಂದ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ತಿರಸ್ಕರಿಸಿದ ದೆಹಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದು, ಅಲ್ಲೂ ಹಿನ್ನಡೆಯಾಗಿದೆ.
ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ (Supreme Court) ನಕಾರ ವ್ಯಕ್ತಪಡಿಸಿದೆ.
‘ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯನ್ನು ಸೋಮವಾರದೊಳಗೆ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಅವರ ಅರ್ಜಿಯ ವಿಚಾರಣೆಗೆ ಯಾವುದೇ ವಿಶೇಷ ಪೀಠದ ಲಭ್ಯತೆ ಇಲ್ಲ. ಹಾಗಾಗಿ, ಸೋಮವಾರದೊಳಗೆ ಅರ್ಜಿಯನ್ನು ವಿಚಾರಣೆ ನಡೆಸಲು ಆಗುವುದಿಲ್ಲ’ ಎಂದು ಕೋರ್ಟ್ ತಿಳಿಸಿತು.
ಇ.ಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ (ಏಪ್ರಿಲ್ 9) ತಿರಸ್ಕರಿಸಿತ್ತು. ಇದನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದರಿಂದಾಗಿ ಕೇಜ್ರಿವಾಲ್ ಅವರೀಗ ಏಪ್ರಿಲ್ 15ರವರೆಗೆ ತಿಹಾರ ಜೈಲಿನಲ್ಲೇ ಕಾಲ ಕಳೆಯಬೇಕಾಗಿದೆ.