ಹೊಸದಿಗಂತ ವರದಿ ಧಾರವಾಡ:
ರಾಜ್ಯ ಸರ್ಕಾರವು ಬರಗಾಲ ಘೋಷಣೆ ಮಾಡುವ ವಿಚಾರದಲ್ಲಿ ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಅನ್ಯಾಯ ಎಸಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಗಂಭೀರವಾಗಿ ಆರೋಪಿಸಿದರು.
ಈ ಕುರಿತು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಈ ಬಾರಿ ಮಳೆ ಕೊರತೆಯಿಂದ ಭೀಕರ ಬರದ ಪರಿಸ್ಥಿತಿ ಇದೆ. ಆದರೆ, ಮುಖ್ಯಮಂತ್ರಿ, ಸಚಿವರು ಕೇವಲ ದಕ್ಷಿಣ ಕರ್ನಾಟಕಕ್ಕೆ ಸೀಮಿತ ಎಂಬಂತೆ ಬರ ಪ್ರದೇಶಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ ಎಂದು ದೂರಿದರು.
ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳೇ ರಾಜ್ಯ? ಬರಪೀಡಿತ ಪಟ್ಟಿಯಲ್ಲಿ ಧಾರವಾಡ ಜಿಲ್ಲೆಯ ಒಂದೇ ಒಂದು ತಾಲೂಕೂ ಸೇರಿಸಿಲ್ಲ. ಹಾವೇರಿ, ಗದಗ ಮತ್ತು ಬೆಳಗಾವಿ ಜಿಲ್ಲೆಗಳು ಕೈಬಿಟ್ಟಿರುವುದು ಸರ್ಕಾರಕ್ಕೆ ಈ ಭಾಗದ ಬಗ್ಗೆ ಇರುವ ಅಸಡ್ಡೆ ಎತ್ತಿ ತೋರಿಸುತ್ತದೆ ಎಂದರು.
ಇದನ್ನೂ ಓದಿ:
ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದು, ತಕ್ಷಣವೇ ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳನ್ನು ಬರಪೀಡಿತ ಪಟ್ಟಿಗೆ ಸೇರ್ಪಡೆ ಮಾಡಬೇಕು. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.



